ADVERTISEMENT

ನಟರಾಜು ಭೇಟಿ ಮಾಡಿದ ಸಚಿವ ಮಹದೇವಪ್ಪ

ದೇಶವಳ್ಳಿ: ಕಾಂಗ್ರೆಸ್‌ ಟಿಕೆಟ್‌ ಅಕಾಂಕ್ಷಿಯಾಗಿದ್ದ ಯುವ ಮುಖಂಡ, ಟಿಕೆಟ್‌ ಕೈತಪ್ಪಿದ್ದರಿಂದ ತಟಸ್ಥ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2024, 5:53 IST
Last Updated 17 ಏಪ್ರಿಲ್ 2024, 5:53 IST
ಸಂತೇಮರಹಳ್ಳಿ ಸಮೀಪದ ದೇಶವಳ್ಳಿ ಗ್ರಾಮಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಭೇಟಿನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ಮತ ಯಾಚಿಸಿದರು.
ಸಂತೇಮರಹಳ್ಳಿ ಸಮೀಪದ ದೇಶವಳ್ಳಿ ಗ್ರಾಮಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಭೇಟಿನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ಮತ ಯಾಚಿಸಿದರು.   

ಸಂತೇಮರಹಳ್ಳಿ: ಸಮೀಪದ ದೇಶವಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಸೋಮವಾರ ರಾತ್ರಿ ಭೇಟಿ ನೀಡಿ, ತಮ್ಮ ಮಗ, ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ಪರ ಮತಯಾಚಿಸಿದರು. 

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಡಿ.ಎನ್‌.ನಟರಾಜು ಅವರ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದರು. ಟಿಕೆಟ್‌ ಕೈತಪ್ಪಿದ್ದರಿಂದ ಬೇಸರಗೊಂಡಿರುವ ನಟರಾಜು ಅವರನ್ನು ಸಮಾಧಾನ ಮಾಡಲು ಯತ್ನಿಸಿದರು. 

‘ನಾನು 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ದುಡಿದಿದ್ದೇನೆ. ಪಕ್ಷ ಅಥವಾ ಸರ್ಕಾರದಲ್ಲಿ ನನಗೆ ಜವಾಬ್ದಾರಿಯುತ ಹುದ್ದೆ ನೀಡಿಲ್ಲ. ಈ ಬಾರಿ ಟಿಕೆಟ್‌ ಆಕಾಂಕ್ಷಿಯಾಗಿದ್ದೆ ಎರಡು ವರ್ಷಗಳಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೆ. ಹಾಗಿದ್ದರೂ ಟಿಕೆಟ್‌ ಕೈತಪ್ಪಿದೆ. ನಂತರದಲ್ಲೂ ಪಕ್ಷದ ಮುಖಂಡರು ಯಾರೂ ಸಂಪರ್ಕ ಮಾಡಿಲ್ಲ. ಹೀಗಾಗಿ ತಟಸ್ಥನಾಗಿದ್ದೇನೆ’ ಎಂದು ನಟರಾಜು ಹೇಳಿದರು. 

ADVERTISEMENT

ಸ್ಥಾನಮಾನದ ಭರವಸೆ: ಸಚಿವ ಮಹದೇವಪ್ಪ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರೊಂದಿಗೆ ಚರ್ಚಿಸಿ ಸೂಕ್ತಸ್ಥಾನಮಾನ ಕೊಡಿಸುತ್ತೇನೆ’ ಎಂದು ಭರವಸೆ ನೀಡಿದರಲ್ಲದೆ, ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಮಾಡಿ, ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆಲುವಿಗಾಗಿ ಶ್ರಮಿಸುವಂತೆ  ಮನವಿ ಮಾಡಿದರು.

ಮತಯಾಚನೆ: ಗ್ರಾಮದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಮಹದೇವಪ್ಪ, ‘ಚಾಮರಾಜನಗರ ಜಿಲ್ಲೆಯು ಕಾಂಗ್ರೆಸ್‌ನ ಭದ್ರಕೋಟೆ. ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಗೆಲ್ಲಿಸುವ ಮೂಲಕ ಭದ್ರ ಕೋಟೆಯನ್ನು ಉಳಿಸಿಕೊಳ್ಳಬೇಕು. ಈಗಾಗಲೇ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಜನರಿಗೆ ಸಹಾಯ ಮಾಡುತ್ತಿದೆ. ಅದೇ ರೀತಿ ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡವರ ಅಭಿವೃದ್ಧಿ ಹಾಗೂ ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ’ ಎಂದು ತಿಳಿಸಿದರು.

ಮುಖಂಡರಾದ ಕಿನಕಹಳ್ಳಿ ರಾಚಯ್ಯ, ಡಿ.ಪಿ.ರಾಜು, ಯಜಮಾನರಾದ ಮಂಟಯ್ಯ, ಶಿವಕುಮಾರ್, ಮಹದೇವಸ್ವಾಮಿ, ಶಿವಣ್ಣ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.