ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುಟ್ಟೇಗೌಡನ ದೊಡ್ಡಿ ಗ್ರಾಮದ ತೋಟದ ಮನೆಗಳಲ್ಲಿ ಮಳೆ ಇಲ್ಲದೆ ಹ್ಯಾಂಡ್ ಪಂಪ್ಗಳಲ್ಲಿ ಅಂತರ್ಜಲ ಕುಸಿದಿದ್ದು, ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ.
ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮಳೆ ಇಲ್ಲದೆ ಹ್ಯಾಂಡ್ಪಂಪ್ಗಳಲ್ಲಿ ನೀರು ತಳಮಟ್ಟಕ್ಕೆ ಹೋಗಿದೆ. ಗ್ರಾಮದ ಮಹಿಳೆಯರು ಮತ್ತು ಗ್ರಾಮಸ್ಥರು ಗಂಟೆಗಟ್ಟಲೆ ಕಾದು ಹ್ಯಾಂಡ್ ಪಂಪ್ ಒತ್ತಿದರೆ ಅರ್ಧ ಗಂಟೆಗೆ ಒಂದು ಬಿಂದಿಗೆ ನೀರು ಬರುತ್ತದೆ. ಅದರಲ್ಲಿ ಕಬ್ಬಿಣದ ತುಕ್ಕು ಹಿಡಿದ ಪದರು, ಮಣ್ಣು ಮಿಶ್ರಿತ ನೀರು ಬರುತ್ತಿದೆ ಎನ್ನುತ್ತಾರೆ ಗ್ರಾಮಸ್ಥರು.
ಸಂಬಂಧಪಟ್ಟ ಜನಪ್ರತಿನಿಧಿ ಅಧಿಕಾರಿಗಳು ಇತ್ತ ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಗ್ರಾಮದ ನಿವಾಸಿಗಳು ಒತ್ತಾಯಿಸಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಮಾತ್ರ ಬರುವ ಇವರು ಚುನಾವಣೆ ಮುಗಿದ ನಂತರ ಜನರ ಕಷ್ಟ ಕೇಳುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಾರೆ ಗ್ರಾಮಸ್ಥರು.
ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗಾಗಿ ಹೊಸ ಬೋರ್ವೆಲ್ ಕೊರೆಸಲಾಗಿದೆ, ಅದಕ್ಕೆ ಪೈಪ್ಲೈನ್ ಕಾಮಗಾರಿ ಬಾಕಿ ಉಳಿದಿದೆ. ಒಂದು ವಾರದಲ್ಲಿ ಪೈಪ್ಲೈನ್ ಕಾಮಗಾರಿ ವ್ಯವಸ್ಥೆ ಮಾಡಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾದೇಶ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.