ADVERTISEMENT

ಚಾಮರಾಜನಗರ | 22ರಂದು ದೇವಾಲಯಗಳಲ್ಲಿ ಪೂಜೆ; ನೇರ ಪ್ರಸಾರ

ಚಾಮರಾಜೇಶ್ವರ ಸ್ವಾಮಿ ದೇವಾಲಯದಲ್ಲಿ ಬಿಜೆಪಿಯಿಂದ ಸ್ವಚ್ಛ ತೀರ್ಥ ಅಭಿಯಾನ

​ಪ್ರಜಾವಾಣಿ ವಾರ್ತೆ
Published 18 ಜನವರಿ 2024, 13:46 IST
Last Updated 18 ಜನವರಿ 2024, 13:46 IST
ಚಾಮರಾಜನಗರದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ‘ಸ್ವಚ್ಛ ತೀರ್ಥ’ ಅಭಿಯಾನದ ಭಾಗವಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌, ಜಿಲ್ಲಾ ಘಟಕದ ಅಧ್ಯಕ್ಷ ನಿರಂಜನಕುಮಾರ್‌ ಚಾಮರಾಜೇಶ್ವರ ಸ್ವಾಮಿ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು
ಚಾಮರಾಜನಗರದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ‘ಸ್ವಚ್ಛ ತೀರ್ಥ’ ಅಭಿಯಾನದ ಭಾಗವಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌, ಜಿಲ್ಲಾ ಘಟಕದ ಅಧ್ಯಕ್ಷ ನಿರಂಜನಕುಮಾರ್‌ ಚಾಮರಾಜೇಶ್ವರ ಸ್ವಾಮಿ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು   

ಚಾಮರಾಜನಗರ: 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠೆ ಅಂಗವಾಗಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದ ಚಾಮರಾಜೇಶ್ವರಸ್ವಾಮಿ ದೇವಾಲಯದಲ್ಲಿ ಗುರುವಾರ ಸಂಜೆ ‘ಸ್ವಚ್ಛ ತೀರ್ಥ’ ಅಭಿಯಾನ ನಡೆಯಿತು. 

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ನಿರಂಜನಕುಮಾರ್‌, ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ದೇವಾಲಯದ ಆವರಣದಲ್ಲಿದ್ದ ಕಸ ಕಡ್ಡಿ ಹೆಕ್ಕಿ, ಗುಡಿಸಿ, ನೀರು ಹಾಕಿ ಸ್ವಚ್ಛಗೊಳಿಸಿದರು. 

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನಿರಂಜನಕುಮಾರ್‌, ‘ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠೆ ನಡೆಯುವ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಗ್ರಾಮೀಣ ಭಾಗಗಳಲ್ಲಿರುವ ಎಲ್ಲ ದೇವಾಲಯಗಳಲ್ಲಿ ಪಕ್ಷದ ಕಾರ್ಯಕರ್ತರು ಪೂಜೆ ಸಲ್ಲಿಸಲಿದ್ದಾರೆ. ಅಯೋಧ್ಯೆಯಲ್ಲಿ ನಡೆಯಲಿರುವ ಧಾರ್ಮಿಕ ವಿಧಿ ವಿಧಾನಗಳ ನೇರ ಪ್ರಸಾರವನ್ನು ದೇವಾಲಯಗಳಲ್ಲಿ ಪ್ರದರ್ಶಿಸಿಲೂ ಪಕ್ಷ ಸಿ‌ದ್ಧತೆ ಮಾಡಿಕೊಂಡಿದೆ’ ಎಂದರು. 

ADVERTISEMENT

‘ಆ ದಿನ ಸಂಜೆ 22ಕ್ಕೆ ಮನೆ ಮನೆಗಳಲ್ಲಿ ದೀಪ ಬೆಳಗಬೇಕು ಎಂದು ಪ್ರಧಾನಿ ಮೋದಿ ಅವರು ಕರೆ ನೀಡಿದ್ದು, ಅದರಂತೆ ಪಕ್ಷವು ಕಾರ್ಯಕರ್ತರ ಮನೆ ಮನೆಗಳಲ್ಲಿ ದೀಪ ಹಚ್ಚಲು ಸೂಚನೆ ನೀಡಿದೆ. ಜಿಲ್ಲೆಯಲ್ಲೂ ಅದನ್ನು ಪಾಲಿಸಲಿದ್ದೇವೆ’ ಎಂದರು. 

ಮಾಜಿ ಶಾಸಕ ಎಸ್.ಬಾಲರಾಜ್‌, ಮುಖಂಡರಾದ ದತ್ತೇಶ್‌ ಕುಮಾರ್‌, ವೆಂಕಟೇಶ್‌, ಬಸವಣ್ಣ ಇದ್ದರು.

‘ಮಂಡಲಗಳ ಅಧ್ಯಕ್ಷರ ಆಯ್ಕೆ ಶೀಘ್ರ’ ‘ಜಿಲ್ಲೆಯ ಎಲ್ಲ ಮಂಡಲಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲು ಜಿಲ್ಲಾ ಕೋರ್‌ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅದರಂತೆ ಶೀಘ್ರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇದಕ್ಕಾಗಿ ವೀಕ್ಷಕರನ್ನು ನೇಮಕ ಮಾಡಲಾಗಿದೆ’ ಎಂದು ನಿರಂಜನಕುಮಾರ್‌ ಹೇಳಿದರು.  ‘ವೀಕ್ಷಕರು ಪ್ರತಿ ಮಂಡಲಗಳಿಗೆ ಭೇಟಿ ನೀಡಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.