ಗೌರಿಬಿದನೂರು: ನಗರದ ಹೊರವಲಯ ಮಿನಿವಿಧಾನ ಸೌಧದಲ್ಲಿ ಗುರುವಾರ ಜನತಾ ದರ್ಶನ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿ, ಜನರು ತಮ್ಮ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಕೆಲವು ಸಮಸ್ಯೆ ಬಗೆಹರಿಸಲಾಗುವುದು. ಕೆಲವು ಸಮಸ್ಯೆ ಹಂತ ಹಂತವಾಗಿ ಬಗೆಹರಿಸುವುದಾಗಿ ತಿಳಿಸಿದರು.
ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿದ್ದು ರೈತರು ಭೂಮಿ ಸಿದ್ಧತೆ ಮಾಡಿಕೊಂಡಿದ್ದಾರೆ. ಸರ್ಕಾರ ಕೂಡ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಿಕೊಂಡಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲ. ಹಾಗೆಯೇ ಕಳೆದ ಬಾರಿ ಬೆಳೆ ನಷ್ಟವಾದ ರೈತರಿಗೆ ನೇರವಾಗಿ ಅವರ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ. ಸರ್ಕಾರಿ ಜಮೀನು ಭದ್ರತೆಗಾಗಿ ಪ್ರತ್ಯೇಕ ಆ್ಯಪ್ ತಯಾರಿಸಿದ್ದು ಗಡಿಭಾಗ ಗುರುತಿಸಲಾಗುತ್ತಿದೆ. ರೈತರ ಖಾತೆಗಳಿಗೆ ಆಧಾರ್ ಲಿಂಕ್ ಮಾಡುತ್ತಿರುವುದು ಸಹ ಉತ್ತಮ ಪ್ರಗತಿಯಲ್ಲಿದೆ ಎಂದರು.
ಈಗ ಎಲ್ಲೆಡೆ ಡೆಂಗಿ ಹರಡುತ್ತಿದೆ. ಪ್ರತಿ ಶುಕ್ರವಾರ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಮನೆ ಮನೆಗೆ ತೆರಳಿ ನೀರು ನಿಲ್ಲದಂತೆ ಪರಿಶೀಲನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಈ ಜನತಾ ದರ್ಶನಕ್ಕೆ ಬಂದಿದ್ದ 30ಕ್ಕೂ ಅರ್ಜಿಗಳನ್ನು ಅಧಿಕಾರಿಗಳ ಸಮ್ಮುಖದಲ್ಲೇ ವಿಲೇ ಮಾಡಲು ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ನಿಟ್ಟಾಲಿ, ಉಪ ವಿಭಾಗಧಿಕಾರಿ ಅಶ್ವಿನ್, ತಹಶೀಲ್ದಾರ್ ಮಹೇಶ್ ಪತ್ರಿ, ಕಾರ್ಯನಿರ್ವಾಹಕ ಅಧಿಕಾರಿ ಜಿ.ಕೆ ಹೊನ್ನಯ್ಯ, ಪೌರಾಯುಕ್ತೆ ಡಿ.ಎಂ ಗೀತಾ, ಕ್ಷೇತ್ರ ಶಿಕ್ಷಣಧಿಕಾರಿ ಶ್ರೀನಿವಾಸಮೂರ್ತಿ ಮತ್ತು ಎಲ್ಲ ಇಲಾಖೆ ಅಧಿಕಾರಿಗಳು, ಸಂಘ–ಸಂಸ್ಥೆ ಪದಾಧಿಕಾರಿಗಳು, ಸಾರ್ವಜನಿಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.