ADVERTISEMENT

ಹಾಸ್ಟೆಲ್‌ಗಳಿಗೆ ಡಿಸಿ, ಸಿಇಒ ಅನಿರೀಕ್ಷಿತ ಭೇಟಿ

ವಿದ್ಯಾರ್ಥಿನಿಲಯಗಳ ಸಮಸ್ಯೆ ಗಳ ಬಗ್ಗೆ ಅಹವಾಲು ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 14:51 IST
Last Updated 7 ಜುಲೈ 2024, 14:51 IST
ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೆಸಂದ್ರ ಅಲ್ಪಸಂಖ್ಯಾತ ವಸತಿ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು
ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೆಸಂದ್ರ ಅಲ್ಪಸಂಖ್ಯಾತ ವಸತಿ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು   

ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಹೋಬಳಿ ಯ ಕೊಲಮೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಪೆರೇಸಂದ್ರದ ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ ಭಾನುವಾರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್.ಜಿ.ಟಿ ನಿಟ್ಟಾಲಿ ಅನಿರೀಕ್ಷಿತ ಭೇಟಿ ನೀಡಿದರು.

ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ವಸತಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು. ಅಡುಗೆ ಮನೆಗೆ ತೆರಳಿ ಸ್ವಚ್ಛತೆ ಮತ್ತು ಆಹಾರ ತಯಾರಿಕೆಯ ಗುಣಮಟ್ಟ ಪರಿಶೀಲಿಸಿದರು.

ಕೊಲಮೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ರಸ್ತೆ, ಕಾಂಪೌಂಡ್ ಮತ್ತು ಮಂಚ ಹಾಗೂ ಹಾಸಿಗೆ ಸೌಲಭ್ಯ ನೀಡಬೇಕಾಗಿದೆ. ಪೆರೆಸಂದ್ರ ಅಲ್ಪಸಂಖ್ಯಾತ ವಸತಿ ಶಾಲೆಗೆ ಕ್ರೀಡಾಂಗಣ ಬೇಕು ಎಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.

ADVERTISEMENT

ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು. ಅಗತ್ಯ ಸಿದ್ಧತೆ, ಏಕಾಗ್ರತೆ ಅಳವಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನವು ಅತ್ಯಮೂಲ್ಯವಾದುದು. ಸಮಾಜಕ್ಕೆ, ಪೋಷಕರಿಗೆ, ನೀವು ಓದಿದ ಶಾಲೆ, ಶಿಕ್ಷಕರಿಗೆ ಉತ್ತಮ ಹೆಸರು ತರಬೇಕು ಎಂದು ಕಿವಿಮಾತು ಹೇಳಿದರು.

ಸರ್ಕಾರವು ಶಿಕ್ಷಣಕ್ಕೆ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಈ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಿಕ್ಷಣಕ್ಕೆ ಸಂಬಂಧಿಸಿದ ನಿಮ್ಮ ಕೋರಿಕೆಗಳನ್ನು ಈಡೇರಿಸಲಾಗುವುದು ಎಂದು ಹೇಳಿದರು.

ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು, ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.