ಚಿಕ್ಕಬಳ್ಳಾಪುರ: ಕಣ್ಣುಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಕೆ ಮಾಡಿಕೊಂಡಿರುವ ವಾಹನ ಚಾಲಕರ ವಿರುದ್ಧ ಪೊಲೀಸರು ರಾಜ್ಯದಾದ್ಯಂತ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಜುಲೈ 1ರಿಂದ 7ರ ವರೆಗೆ ರಾಜ್ಯದಲ್ಲಿ ಒಟ್ಟು 8,244 ಪ್ರಕರಣಗಳು ದಾಖಲಾಗಿವೆ. ಈ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಟ್ಟು 18 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಜು.1 ಮತ್ತು 2ರಂದು ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಜು.3ರಂದೇ 13 ಪ್ರಕರಣಗಳು ದಾಖಲಾಗಿವೆ. 4ರಂದು ಶೂನ್ಯ ಪ್ರಕರಣವಿದ್ದರೆ 5ರಂದು ಮೂರು ಪ್ರಕರಣ ದಾಖಲಾಗಿವೆ. ಜು.6ರಂದು ಯಾವುದೇ ಪ್ರಕರಣ ದಾಖಲಾಗಿಲ್ಲ. ಜು.7ರಂದು ಎರಡು ಪ್ರಕರಣ ದಾಖಲಾಗಿವೆ.
ಎಲ್ಇಡಿ ದೀಪಗಳನ್ನು ಅಳವಡಿಸಿಕೊಂಡಿರುವ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಂಡ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಮಾಹಿತಿ ನೀಡಿದ್ದಾರೆ.
ಕಾರು, ಬೈಕ್ ಹಾಗೂ ಇತರ ವಾಹನಗಳಲ್ಲಿ ಕಣ್ಣುಕುಕ್ಕುವಂತಹ ಎಲ್ಇಡಿ ದೀಪಗಳನ್ನು ಅಳವಡಿಸಿಕೊಂಡು ಅಪಘಾತಕ್ಕೆ ಕಾರಣ ಆಗುತ್ತಿರುವ ಸವಾರ ವಿರುದ್ಧ ಒಂದು ವಾರದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಮೋಟಾರ್ ಕಾಯ್ದೆ(ಸಿಎಂವಿ) ಉಲ್ಲಂಘಿಸುತ್ತಿರುವ ಬೈಕ್ ಸವಾರರು ಹಾಗೂ ವಾಹನ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.