ಚಿಕ್ಕಮಗಳೂರು: ಚುನಾವಣೆ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ತಡೆಗೆ ಚುನಾವಣಾ ಆಯೋಗ ಸಿ–ವಿಜಿಲ್ ಆ್ಯಪ್ ಬಿಡುಗಡೆಗೊಳಿಸಿದೆ. ಸಾರ್ವಜನಿಕರು ಚುನಾವಣೆ ಅಕ್ರಮಗಳ ಕುರಿತು ದೂರುಗಳಿದ್ದಲ್ಲಿ ಸಿ–ವಿಜಿಲ್ ಆ್ಯಪ್ ಜತೆಗೆ ಉಚಿತ ಸಹಾಯವಾಣಿ 1950 ಕರೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ ಸಿ–ವಿಜಿಲ್ ಆ್ಯಪ್ ಬಿಡುಗಡೆ ಮಾಡಿದ್ದು, ಚುನಾವಣೆಗೆ ಸ್ಪರ್ಧಿಸಿರುವ ವ್ಯಕ್ತಿಗೆ ಅಥವಾ ಪಕ್ಷಕ್ಕೆ ಮತ ಹಾಕುವಂತೆ ಮತದಾರರಿಗೆ ಆಮಿಷವೊಡ್ಡುವುದು, ಹಣ, ಉಡುಗೊರೆ, ಕೂಪನ್ಗಳ ವಿತರಣೆ, ಮದ್ಯದ ಆಸೆ ತೋರಿಸುವುದು ಮಾಡಿದ್ದಲ್ಲಿ ದೂರು ನೀಡಬಹುದು.
ಮತದಾರರ ಅನುಮತಿ ಇಲ್ಲದೆ ಮನೆ ಮುಂದೆ ಪೋಸ್ಟರ್ ಮತ್ತು ಬ್ಯಾನರ್ಗಳನ್ನು ಅಂಟಿಸುವುದು. ಆಸ್ತಿ ವಿರೂಪಗೊಳಿಸುವುದು, ಧಾರ್ಮಿಕ ಅಥವಾ ಕೋಮು ಪ್ರಚೋದಿತ ಭಾಷಣ ಮಾಡಿವುದು ಕಂಡು ಬಂದಲ್ಲಿ ದೂರು ದಾಖಲಿಸಬಹುದು ಎಂದು ವಿವರಿಸಿದ್ದಾರೆ.
ಮತದಾನದ ದಿನ ಮತದಾರರನ್ನು ವಾಹನಗಳಲ್ಲಿ ಕರೆ ತಂದು ಪ್ರಲೋಬನೆಗೊಳಿಸುವುದು, ಮತ ಹಾಕುವಂತೆ ಬೆದರಿಸುವುದು ಹಾಗೂ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದರು ಸಿ–ವಿಜಿಲ್ ಆ್ಯಪ್ ಮೂಲಕ ದೂರುಸಲ್ಲಿಸಲು ಅವಕಾಶವಿದೆ. ಸಾರ್ವಜನಿಕರು ಪ್ಲೇ ಸ್ಟೋರ್ನಲ್ಲಿ ಸಿ–ವಿಜಿಲ್ ಆ್ಯಪ್ ಡೌನ್ ಲೋಡ್ ಮಾಡಿಕೊಂಡು ಅಕ್ರಮಗಳ ಕುರಿತು ಚಿತ್ರ ಹಾಗೂ ವಿಡಿಯೊಗಳನ್ನು ಅಪ್ಲೋಡ್ ಮಾಡಬಹುದು. ದೂರು ನೀಡುವ ಸಾರ್ವಜನಿಕರ ಹೆಸರುಗಳನ್ನು ಗೌಪ್ಯವಾಗಿ ಇಡಲಾಗುವುದು. ಸಿ–ವಿಜಿಲ್ನಲ್ಲಿ ದಾಖಲಾಗುವ ದೂರುಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಕಚೇರಿ, ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿ ಇರುವರು. ದೂರು ದಾಖಲಾದ ಬಳಿಕ ಪರಿಶೀಲಿಸಿ ಪ್ಲೈಯಿಂಗ್ ಸ್ಕ್ವಾಡ್ ತಂಡ ತುರ್ತು ಕ್ರಮ ವಹಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.