ಚಿಕ್ಕಮಗಳೂರು: ‘ನನ್ನ ಆರೋಗ್ಯ ಸರಿ ಇಲ್ಲ ಎಂಬ ಸುಳ್ಳು ಸುದ್ದಿ ಹಬ್ಬಿಸಿ ದಾರಿ ತಪ್ಪಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ’ ಎಂದು ಮಾಜಿ ಸಂಸದೆ ಡಿ.ಕೆ.ತಾರಾದೇವಿ ಅಸಮಾಧಾನ ವ್ಯಕ್ತಪಡಿಸಿದರು.
‘ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ನಾನೇ ಅಭ್ಯರ್ಥಿಯಾಗಬೇಕು ಎಂದು ಬಯಸಿದ್ದಾರೆ. ಪಕ್ಷದ ಹೈಕಮಾಂಡ್ಗೂ ಮನವರಿಕೆ ಮಾಡಿಕೊಡುತ್ತಿದ್ದಾರೆ. ಈ ಸಂದರ್ಭದಲ್ಲಿ ನನಗೆ ಅನಾರೋಗ್ಯ ಇದೆ ಎಂದು ಕೆಲವರು ಸುಳ್ಳು ಹರಡುತ್ತಿದ್ದಾರೆ. ನಾನು ಆರೋಗ್ಯವಾಗಿದ್ದೇನೆ’ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಸ್ಪಷ್ಟಪಡಿಸಿದರು.
‘ನಾನು ಅಭ್ಯರ್ಥಿಯಾದರೆ ಬಿಜೆಪಿಗೆ ಪ್ರಬಲ ಪೈಪೋಟಿ ಒಡ್ಡಲು ಸಾಧ್ಯವಿದೆ ಎಂಬುದು ಕಾರ್ಯಕರ್ತರ ಅಭಿಪ್ರಾಯ. ಪಕ್ಷ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧಳಿದ್ದೇನೆ’ ಎಂದರು.
‘ಪತಿಯ ಮರಣಾನಂತರ ಕೆಲಕಾಲ ಸಾರ್ವಜನಿಕ ಜೀವನದಿಂದ ಹೊರಗಿದ್ದೆ. ಈಗ ಚೇತರಿಸಿಕೊಂಡು ಪಕ್ಷದ ಕಾರ್ಯಕ್ರಮ, ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ’ ಎಂದು ತಿಳಿಸಿದರು.
ಸಂಸ್ಥೆಯೊಂದನ್ನು ಹುಟ್ಟುಹಾಕಿ ಯುವಕರು ಮತ್ತು ಮಹಿಳಾ ಸಬಲೀಕರಣಕ್ಕೆ ದುಡಿಯುವ ಇಚ್ಛೆ ಇದೆ. ಈ ಸಂಬಂಧ ರೂಪರೇಷೆ ಸಿದ್ಧವಾಗುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.