ಚಿಕ್ಕಮಗಳೂರು: ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಶ್ರೀಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಪಾದುಕೆ ದರ್ಶನ ಪಡೆದು ಚುನಾವಣಾ ಪ್ರಚಾರ ಆರಂಭಿಸಿದರು.
ನಗರದ ಹನುಮಂತಪ್ಪ ವೃತ್ತದಲ್ಲಿ ರಸ್ತೆ ಬದಿಯ ಕ್ಯಾಂಟೀನ್ನಲ್ಲಿ ಬನ್ಸ್ ಮತ್ತು ಟೀ ಸವಿದ ಅವರು, ಶ್ರೀಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ತೆರಳಿದರು. ಪಾದುಕೆಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ದತ್ತ ಪಾದುಕೆ ದರ್ಶನ ಪಡೆದು ಭಾವುಕನಾಗಿದ್ದೇನೆ. ಈ ಕ್ಷಣದಿಂದ ಪ್ರಚಾರ ಆರಂಭವಾಗಿದೆ’ ಎಂದರು.
‘ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡುವುದು ಪಕ್ಷದ ಜವಾಬ್ದಾರಿ. ಕೆ.ಎಸ್.ಈಶ್ವರಪ್ಪ ಅವರು ಪಕ್ಷದ ಹಿರಿಯ ನಾಯಕ. ರಾಷ್ಟ್ರ ಮತ್ತು ರಾಜ್ಯ ನಾಯಕರು ಅವರನ್ನು ಕರೆದು ಒಂದೆರಡು ದಿನಗಳಲ್ಲೇ ಸಮಾಧಾನ ಮಾಡಿ ಗೊಂದಲ ಪರಿಹರಿಸುವ ವಿಶ್ವಾಸ ಇದೆ’ ಎಂದು ಹೇಳಿದರು.
‘ಬಿಜೆಪಿ ದೊಡ್ಡ ರಾಜಕೀಯ ಪಕ್ಷವಾಗಿದ್ದು, ಟಿಕೆಟ್ಗೆ ಪೈಪೋಟಿ ಇರುವುದು ಸಾಮಾನ್ಯ. ಸಂಘಟನೆ ಗಟ್ಟಿಯಾಗಿದೆ ಎಂಬುದಕ್ಕೆ ಇದು ಸಾಕ್ಷಿ. ಉಡುಪಿ–ಚಿಕ್ಕಮಗಳೂರು ಕ್ಷೇತ್ರಕ್ಕೆ ಆಕಾಂಕ್ಷಿಯಾಗಿದ್ದ ಶೋಭಾ ಕರಂದ್ಲಾಜೆ, ಪ್ರಮೋದ್ ಮಧ್ವರಾಜ್ ಸೇರಿ ಎಲ್ಲರೂ ನನಗೆ ಶುಭ ಹಾರೈಸಿದ್ದಾರೆ. ಸಿ.ಟಿ.ರವಿ ಅವರ ಜತೆಗೂಡಿಯೇ ಕಾರ್ಯಕರ್ತರ ಸಭೆ ನಡೆಸಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.