ADVERTISEMENT

ಹಿರಿಯೂರು | ಲಾರಿಗೆ ಕಾರು ಡಿಕ್ಕಿ; ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದುರ್ಮರಣ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 14:09 IST
Last Updated 3 ಅಕ್ಟೋಬರ್ 2024, 14:09 IST
ಚಂದ್ರಶೇಖರ್
ಚಂದ್ರಶೇಖರ್   

ಹಿರಿಯೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ತಾಲ್ಲೂಕಿನ ಕಸ್ತೂರಿ ರಂಗಪ್ಪನ ಹಳ್ಳಿ ಗೇಟ್ ಬಳಿ ಗುರುವಾರ ಲಾರಿಗೆ ಕಾರು ಡಿಕ್ಕಿ ಹೊಡೆದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ (49) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕಾರಿನಲ್ಲಿ ಚಂದ್ರಶೇಖರ್, ಅವರ ಪತ್ನಿ ಜಯಶೀಲಾ, ಪುತ್ರಿ ಚಂದನಾ ಹಾಗೂ ಪುತ್ರ ಚಿರಾಗ್ ಪ್ರಯಾಣಿಸುತ್ತಿದ್ದರು. ಅವಘಡದಲ್ಲಿ ಗಾಯಗೊಂಡ ಮೂವರನ್ನು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದ ನಂತರ ಚನ್ನಪಟ್ಟಣಕ್ಕೆ ಕಳುಹಿಸಲಾಗಿದೆ.

ಮಗನನ್ನು ವೈದ್ಯಕೀಯ ಕಾಲೇಜಿಗೆ ಬಿಡಲು ಹೊರಟಿದ್ದ ಕುಟುಂಬ: ದಾವಣಗೆರೆಯ ಬಾಪೂಜಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್‌ಗೆ ವಾರದ ಹಿಂದೆ ಚಿರಾಗ್‌ನನ್ನು ದಾಖಲು ಮಾಡಲಾಗಿತ್ತು. ಆತನನ್ನು ಕಾಲೇಜಿಗೆ ಬಿಡಲೆಂದು ಪತ್ನಿ, ಪುತ್ರಿ ಜೊತೆಗೆ ಚಂದ್ರಶೇಖರ್ ಹೋಗುವಾಗ ದುರ್ಘಟನೆ ಸಂಭವಿಸಿದೆ ಎಂದು ರಾಮನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಸತೀಶ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ADVERTISEMENT

ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಕಾಳಿಕೃಷ್ಣ ಪ್ರಕರಣ ದಾಖಲು ಮಾಡಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

ಅಪಘಾತದಲ್ಲಿ ಜಖಂಗೊಂಡಿರುವ ಕಾರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.