ಸಿರಿಗೆರೆ (ಚಿತ್ರದುರ್ಗ): ರಾಷ್ಟ್ರೀಯ ಹೆದ್ದಾರಿ 48ರ ಚಿಕ್ಕಬೆನ್ನೂರು ಗ್ರಾಮದ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಪ್ರಜ್ವಲ್ ರೆಡ್ಡಿ (30), ಹರ್ಷಿತಾ (26) ಹಾಗೂ ಸೋಹನ್ (2) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ವಿಜಯರೆಡ್ಡಿ ಎಂಬುವರು ದಾವಣಗೆರೆಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಶಿಲ್ಪಾ, ಸ್ವರ್ಣ ಜಾರ್ಜ್, ಮಧುಮಿತ ಮತ್ತು ಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಕಾರಿನಲ್ಲಿ ಒಟ್ಟು 8 ಜನ ಇದ್ದರು. ಇವರೆಲ್ಲರೂ ಬೆಂಗಳೂರಿನ ಥಣಿಸಂದ್ರ ನಿವಾಸಿಗಳು ಎಂದು ಹೇಳಲಾಗಿದೆ. ವಾರಾಂತ್ಯದ ರಜೆ ಕಳೆಯಲು ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದರು.
ಹೆದ್ದಾರಿಯ ಮೂಲಕ ಚಿತ್ರದುರ್ಗದಿಂದ ದಾವಣಗೆರೆಗೆ ತೆರಳುತ್ತಿದ್ದ ಕಂಟೇನರ್ ಲಾರಿಯ ಟಯರ್ ಸಿಡಿದಿದೆ. ಅದರ ಹಿಂದೆಯೇ ವೇಗವಾಗಿ ಬರುತ್ತಿದ್ದ ಫಾರ್ಚೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ಗೆ ಡಿಕ್ಕಿ ಹೊಡೆದಿದೆ. ಲಾರಿ ಮತ್ತು ಕಾರು ಜಖಂಗೊಂಡಿವೆ. ಚಿತ್ರದುರ್ಗದ ಎಸ್ಪಿ ಧರ್ಮೇಂದ್ರಕುಮಾರ್ ಮೀನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.