ಸಿರಿಗೆರೆ: ನವಜಾತ ಶಿಶುಗಳಿಗೆ ಉತ್ತಮ ಲಸಿಕೆ ಕೊಡಿಸಿದರೆ ಅವರು ಆರೋಗ್ಯವಂತರಾಗಿ ಬೆಳೆಯುತ್ತಾರೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಜಿ. ತಿಮ್ಮೇಗೌಡ ಸಲಹೆ ನೀಡಿದರು.
ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿಯರು ಮತ್ತು ಎದೆಹಾಲು ಉಣಿಸುವ ತಾಯಂದಿರಿಗೆ ಗುರುವಾರ ಹಮ್ಮಿಕೊಂಡಿದ್ದ ನವಜಾತ ಶಿಶುವಿನ ಆರೈಕೆ ಕುರಿತ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೆರಿಗೆ ನಂತರ ತಾಯಿ ಮತ್ತು ಮಗುವಿನ ಆರೋಗ್ಯದ ಕಡೆಗೆ ಆರೋಗ್ಯ ಇಲಾಖೆ ಗಮನ ಹರಿಸುತ್ತಿದೆ. ತಾಯಿ ಮತ್ತು ಮಗುವಿನ ಮರಣ ಪ್ರಮಾಣವನ್ನು ಕಡಿಮೆಗೊಳಿಸಲು ಇಲಾಖೆ ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದರು.
ಮಗುವಿನ ಆರೈಕೆ ಗರ್ಭದಿಂದಲೇ ಆರಂಭವಾದರೆ ತಾಯಿ ಮತ್ತು ಮಗುವಿನ ಮರಣ ಪ್ರಮಾಣವನ್ನು ಕಡಿಮೆಗೊಳಿಸಬಹುದು. ಗರ್ಭಿಣಿಯರು ಕನಿಷ್ಠ ಮೂರು ನಾಲ್ಲು ಬಾರಿಯಾದರೂ ವೈದ್ಯರಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
18 ವರ್ಷದ ಒಳಗಿನ ಹೆಣ್ಣುಮಕ್ಕಳಿಗೆ ಮದುವೆ ಮಾಡಬಾರದು. ಇದರಿಂದ ಮಕ್ಕಳ ಬೆಳವಣಿಗೆಯೂ ಕುಂಠಿತವಾಗುತ್ತದೆ ಎಂದು ಹೆರಿಗೆ ಮತ್ತು ಸ್ತ್ರೀರೋಗ ತಜ್ಞೆ ಡಾ. ಪವಿತ್ರಾ ಹೇಳಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ. ಮೂಗಪ್ಪ, ಜಾನಕಿ, ಡಾ. ಪ್ರಸನ್ನಕುಮಾರ್, ಆರೋಗ್ಯ ನಿರೀಕ್ಷಣಾಧಿಕಾರಿ ಸುನಿಲ್ ಕುಮಾರ್, ಅಅಧಿಕಾರಿಗಳಾದ ಮೋಹನ್ ಕುಮಾರ್, ತಾರಾ, ಪ್ರೇಮಾ, ನಾಗವೇಣಿ, ಸಿಬ್ಬಂದಿ ಶಾರದಮ್ಮ, ಕಾವ್ಯಾ, ಶಿವರಾಜ್ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.