ಮೊಳಕಾಲ್ಮುರು: ದೇಶವನ್ನು ಮಾರಕವಾಗಿ ಕಾಡುತ್ತಿರುವ ಬಾಲಕಾರ್ಮಿಕ ಪದ್ಧತಿಯನ್ನು ಬೇರುಸಹಿತ ನಿರ್ಮೂಲನೆ ಮಾಡಬೇಕಿದ್ದರೆ, ಪ್ರತಿಯೊಬ್ಬ ಪಾಲಕರೂ ತಮ್ಮ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸುವುದರಿಂದ ಮಾತ್ರ ಸಾಧ್ಯವಿದೆ ಎಂದು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಆರ್. ಆನಂದ್ ಹೇಳಿದರು.
ಕನ್ನಡ ಭವನದಲ್ಲಿ ಬುಧವಾರ ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
‘ಹಲವು ಅಪರಾಧ, ದೌರ್ಜನ್ಯ ಘಟನೆಗಳಲ್ಲಿ ಅಪ್ರಾಪ್ತ ವಯಸ್ಸಿನವರು ಹೆಚ್ಚಿನ ಪ್ರಮಾಣದಲ್ಲಿ ಭಾಗಿಯಾಗಿರುವುದು ಆತಂಕಕಾರಿ ಸಂಗತಿಯಾಗಿದ್ದು, ಇದನ್ನು ತಪ್ಪಿಸದಿದ್ದರೆ ಭವಿಷ್ಯದಲ್ಲಿ ಅಪರಾಧಯುಕ್ತ ಸಮಾಜವನ್ನು ಕಾಣುವ ಅನಿವಾರ್ಯತೆ ಎದುರಾಗಲಿದೆ’ ಎಂದು ವಕೀಲ ರಾಮಾಂಜಿನೇಯ ಎಚ್ಚರಿಸಿದರು.
ಸರ್ಕಾರಿ ಅಭಿಯೋಜಕ ಮಹಮದ್ ಶಂಶಿಲ್ ಆಲಿ, ವಕೀಲರ ಸಂಘದ ಕಾರ್ಯದರ್ಶಿ ಕುಮಾರಪ್ಪ, ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ನವೀನ್, ವಕೀಲರಾದ ಅನಸೂಯಮ್ಮ, ಕುರಾಕಲಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಬೋರಮ್ಮ ಕೆಂಚಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.