ADVERTISEMENT

ವಿರೋಧ ಪಕ್ಷಗಳ ಟೀಕೆಗೆ ಗ್ಯಾರಂಟಿ ಯೋಜನೆಗಳೇ ಉತ್ತರ: ಟಿ.ರಘುಮೂರ್ತಿ

ಗ್ಯಾರಂಟಿ ಯೋಜನೆಗಳ ಜಾಗೃತಿ ಸಮಾವೇಶದಲ್ಲಿ ಟಿ.ರಘುಮೂರ್ತಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2024, 12:57 IST
Last Updated 5 ಮಾರ್ಚ್ 2024, 12:57 IST
ತುರುವನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಜಾಗೃತಿ ಸಮಾವೇಶದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿದರು
ತುರುವನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಜಾಗೃತಿ ಸಮಾವೇಶದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿದರು   

ತುರುವನೂರು (ನಾಯಕನಹಟ್ಟಿ): ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನವೇ ವಿರೋಧ ಪಕ್ಷಗಳ ಟೀಕೆಗೆ ತಕ್ಕ ಉತ್ತರ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು.

ತುರುವನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲ್ಲೂಕು ಆಡಳಿತ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಹಯೋಗದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಜಾಗೃತಿ ಸಮಾವೇಶ ಮತ್ತು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತು ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದರು. ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷವು ನೀಡಿದ್ದ ಭರವಸೆಗಳಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಯಿತು. ಆಗ ರಾಜ್ಯದ ವಿರೋಧ ಪಕ್ಷದಲ್ಲಿದ್ದ ಹಲವು ನಾಯಕರು, ‘ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ’ ಎಂದು ಕಾಂಗ್ರೆಸ್ ಸರ್ಕಾರದ ಮೇಲೆ ಟೀಕಾ ಪ್ರಹಾರ ನಡೆಸಿದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದರು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂಬ ತಾರತಮ್ಯವಿಲ್ಲದೇ, ಎಲ್ಲ ಪಕ್ಷಗಳ ಮುಖಂಡರು, ಅಭಿಮಾನಿಗಳು, ಪದಾಧಿಕಾರಿಗಳು ಸೇರಿದಂತೆ ರಾಜ್ಯದ ಪ್ರತಿಮನೆಯ ಸದಸ್ಯರು ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಿದ್ದಾರೆ’ ಎಂದರು. 

ADVERTISEMENT

ತಹಶೀಲ್ದಾರ್ ನಾಗವೇಣಿ, ತಾ.ಪಂ. ಇಒ ಅನಂತರಾಜು, ಸಿಡಿಪಿಒ ಸುಧಾ, ಬೆಸ್ಕಾಂ ಎಇಇ ಜಯಣ್ಣ, ಗ್ರಾ.ಪಂ.ಅಧ್ಯಕ್ಷರಾದ ದೀಪಾಮಹೇಶ್, ಮಂಗಳ ಸಿದ್ದೇಶ್, ಅನಿಲ್‌ಕುಮಾರ್, ಮಹಾಂತಮ್ಮ, ಎಂ.ಆರ್.ಮಂಜುಶ್ರೀ, ಉಪಾಧ್ಯಕ್ಷರಾದ ತಿಪ್ಪೇಸ್ವಾಮಿ, ಸುಧಾರಾಣಿ, ಸರಸ್ವತಿ ರಾಜೇಶ್, ಗಂಗಾಧರಪ್ಪ, ರಾಮಚಂದ್ರರೆಡ್ಡಿ, ಮುಖಂಡರಾದ ಬಾಬುರೆಡ್ಡಿ, ಸುಭಾಸ್‌ರೆಡ್ಡಿ, ಸಿದ್ದೇಶ್, ಮಂಜುನಾಥ ಅವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.