ಹಿರಿಯೂರು: ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯಲ್ಲಿರುವ ಗಾಯತ್ರಿ ಜಲಾಶಯಕ್ಕೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬೋರನಕಣಿವೆ ಅಣೆಕಟ್ಟೆಯಿಂದ 7 ದಿನ ನೀರು ಹರಿಸುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಮೇ 23ರಂದು ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಬಿ. ಪಾಪಣ್ಣ ತಿಳಿಸಿದ್ದಾರೆ.
ಮಾರ್ಚ್ 28ರಂದು ಕುಡಿಯುವ ನೀರಿನ ಪರಿಸ್ಥಿತಿ ಉತ್ತಮಗೊಳ್ಳುವವರೆಗೆ ಗಾಯತ್ರಿ ಜಲಾಶಯಕ್ಕೆ ನೀರನ್ನು ಬಿಡುಗಡೆ ಮಾಡಲು ಸೂಚಿಸಲಾಗಿತ್ತು. ಪ್ರಸ್ತುತ ಇದುವರೆಗೂ ಕುಡಿಯುವ ನೀರಿನ ಪರಿಸ್ಥಿತಿ ಸುಧಾರಣೆಯಾಗದ ಕಾರಣ 7 ದಿನದವರೆಗೆ ಬೋರನಕಣಿವೆ ಅಣೆಕಟ್ಟೆಯಿಂದ ನೀರು ಬಿಡುಗಡೆ ಮಾಡಲು ಕ್ರಮ ತೆಗೆದುಕೊಳ್ಳುವಂತೆ ತುಮಕೂರು ಜಿಲ್ಲಾಧಿಕಾರಿಗೆ ಆಯುಕ್ತರು ಪತ್ರ ಬರೆದಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮೇ 20 ರಿಂದ 3–4 ದಿನಗಳ ಕಾಲ ಚಿತ್ರದುರ್ಗ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಆದರೆ, ಜವನಗೊಂಡನಹಳ್ಳಿ ಭಾಗದಲ್ಲಿ ನಿರೀಕ್ಷೆಯಂತೆ ಮಳೆಯಾಗದ ಕಾರಣ ಈಗಲೂ, ಗ್ರಾಮೀಣ ಭಾಗದ ಜನರು ಟ್ಯಾಂಕರ್ ನೀರಿಗೆ ಕಾಯುವುದು ತಪ್ಪಿಲ್ಲ. ಕುಡಿಯುವ ನೀರಿನ ಸಮಸ್ಯೆ ಅರಿತು ಬೋರನಕಣಿವೆ ಅಣೆಕಟ್ಟೆಯಿಂದ ನೀರು ಬಿಡುಗಡೆಗೆ ಆದೇಶ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.