ADVERTISEMENT

ಶೋಷಿತರ ಜಾಗೃತಿ ಸಮಾವೇಶ ಜ.28ಕ್ಕೆ

ಕಾಂತರಾಜ ವರದಿ ಜಾರಿಗೆ ಆಗ್ರಹ, ಸಿದ್ದರಾಮಯ್ಯ ಬೆಂಬಲಕ್ಕೆ ಸಜ್ಜಾದ ‘ಅಹಿಂದ’

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2023, 18:51 IST
Last Updated 27 ಡಿಸೆಂಬರ್ 2023, 18:51 IST
<div class="paragraphs"><p>ಸಮಾವೇಶ (ಸಾಂದರ್ಭಿಕ ಚಿತ್ರ)</p></div>

ಸಮಾವೇಶ (ಸಾಂದರ್ಭಿಕ ಚಿತ್ರ)

   

ಚಿತ್ರದುರ್ಗ: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್‌.ಕಾಂತರಾಜ ನಡೆಸಿದ ಜಾತಿ ಗಣತಿ ವರದಿಯನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿರುವ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಜ.28ರಂದು ನಗರದಲ್ಲಿ ‘ಶೋಷಿತರ ಜಾಗೃತಿ ಸಮಾವೇಶ’ ಆಯೋಜಿಸಿದೆ.

ಸಮಾವೇಶದ ಸಿದ್ಧತೆಗೆ ಸಂಬಂಧಿಸಿದಂತೆ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಸಮಾವೇಶದ ರೂಪುರೇಷೆ ಕುರಿತು ಚರ್ಚಿಸಲಾಯಿತು.

ADVERTISEMENT

ನಗರದ ಹೊರವಲಯದ ಮಾದಾರ ಚನ್ನಯ್ಯ ಗುರುಪೀಠದ ಬಳಿ ನಡೆಯಲಿರುವ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಪಾಲ್ಗೊಳ್ಳಲಿದ್ದಾರೆ.

‘ದಾವಣಗೆರೆಯಲ್ಲಿ ಈಚೆಗೆ ನಡೆದ ಪ್ರಬಲ ಜಾತಿಯ ಮಹಾ ಅಧಿವೇಶನದಲ್ಲಿ ಕಾಂತರಾಜ ವರದಿಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಜಾತಿ ಗಣತಿ ವರದಿ ಬಗ್ಗೆ ಈ ಪರಿಯ ಭಯ ಏಕೆ ಎಂಬುದು ಇನ್ನೂ ಅರ್ಥವಾಗುತ್ತಿಲ್ಲ. ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿ ಯಥಾವತ್ತಾಗಿ ಜಾರಿಗೊಳಿಸಬೇಕು. ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ’ ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಸಭೆಯ ನಂತರ ವಿವರಿಸಿದರು.

‘ಪ್ರಬಲ ಜಾತಿಗಳ ದಬ್ಬಾಳಿಕೆಗೆ ಪ್ರತಿರೋಧ ವ್ಯಕ್ತಪಡಿಸುವ ಅಗತ್ಯವಿದೆ. ಅಹಿಂದ ವರ್ಗಕ್ಕೆ ಅಧಿಕಾರ ನೀಡದವರಿಗೆ ಸಂದೇಶ ರವಾನಿಸಬೇಕಿದೆ. ಸಮಾವೇಶ ಶೋಷಿತ ಸಮುದಾಯಗಳ ಶಕ್ತಿ ಪ್ರದರ್ಶನವಾಗಬೇಕು. ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚಿಸಿ ಜನರನ್ನು ಕರೆತರಲಾಗುವುದು’ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.