ಮೂಡುಬಿದಿರೆ: ‘ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೇ ಆ ಪಕ್ಷ ದುರ್ಬಲವಾಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಮೋದಿಯವರೇ ಪ್ರಯಾಸದಿಂದ ಗೆದ್ದಿದ್ದಾರೆ. ಭವಿಷ್ಯದಲ್ಲಿ ದೇಶಕ್ಕೆ ರಾಹುಲ್ ಗಾಂಧಿ ಪ್ರಧಾನಿಯಾಗಲಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.
ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೂಡುಬಿದಿರೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹರ್ಷವರ್ಧನ ಪಡಿವಾಳ್ ಅವರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ‘ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಉತ್ತಮ ಸ್ಥಾನಮಾನ ಲಭಿಸುತ್ತದೆ ಎಂಬುದಕ್ಕೆ ಐವನ್, ಹರ್ಷವರ್ಧನ್ ಸಾಕ್ಷಿಯಾಗಿದ್ದಾರೆ. ಮೂಡುಬಿದಿರೆ ಮೂಡ ಕಚೇರಿ ಭ್ರಷ್ಟಾಚಾರ ರಹಿತ, ಬಡಜನರ ಆಶೋತ್ತರಗಳನ್ನು ಈಡೇರಿಸುವ ಕಚೇರಿಯಾಗಬೇಕು ಎಂದರು.
ಶಾಸಕ ಭರತ್ ಶೆಟ್ಟಿ ಅವರು ರಾಹುಲ್ ಗಾಂಧಿ ಬಗ್ಗೆ ಮಾಡಿದ ಅಪಮಾನಕಾರಿ ಹೇಳಿಕೆಯನ್ನು ಖಂಡಿಸಿದ ಅವರು `ನಾನು ಹಿಂದೂ ನಾನು ರಾಹುಲ್ ಗಾಂಧಿ' ಎಂಬ ಬರಹದ ಮುಖವಾಡವನ್ನು ಕಾಂಗ್ರೆಸ್ ಕಾರ್ಯಕರ್ತರು ಧರಿಸಿ ಜುಲೈ 20ಕ್ಕೆ ಮಂಗಳೂರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದರು.
ಕೆಪಿಸಿಸಿ ಸದಸ್ಯರಾದ ವಸಂತ ಬರ್ನಾಡ್, ಚಂದ್ರಹಾಸ ಸನಿಲ್, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಕೋಟ್ಯಾನ್, ನಗರ ಘಟಕದ ಅಧ್ಯಕ್ಷ ಪುರಂದರ ದೇವಾಡಿಗ, ಮಹಿಳಾ ಘಟಕದ ಅಧ್ಯಕ್ಷೆ ಸುಪ್ರಿಯಾ ಡಿ. ಶೆಟ್ಟಿ, ಜಯಕುಮಾರ್ ಶೆಟ್ಟಿ, ವಜೀರ್, ವಿವೇಕ್, ಜಯಕುಮಾರ್, ಅರುಣ್ ಕುಮಾರ್ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.