ADVERTISEMENT

ಚೆಲ್ಯಡ್ಕ ಸೇತುವೆ: ಹಗಲಲ್ಲಿ ಭಾರಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ; ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 15:47 IST
Last Updated 28 ಜೂನ್ 2024, 15:47 IST
ಗುರುವಾರ ಮುಳಗಡೆಗೊಂಡಿದ್ದ, ಶಿಥಿಲವಾಗಿರುವ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಶೀಲನೆ ನಡೆಸಿದರು
ಗುರುವಾರ ಮುಳಗಡೆಗೊಂಡಿದ್ದ, ಶಿಥಿಲವಾಗಿರುವ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಶೀಲನೆ ನಡೆಸಿದರು   

ಪುತ್ತೂರು: ಪುತ್ತೂರು-ಪರ್ಲಡ್ಕ-ಕುಂಜೂರುಪಂಜ-ಪಾಣಾಜೆ ರಸ್ತೆಯ ಚೆಲ್ಯಡ್ಕದಲ್ಲಿರುವ ಮುಳುಗು ಸೇತುವೆ ಶಿಥಿಲಾವಸ್ಥೆಯಲ್ಲಿರುವುದರಿಂದ ಶುಕ್ರವಾರದಿಂದ ಜಾರಿಗೆ ಬರುವಂತೆ ರಾತ್ರಿ ಎಲ್ಲ ವಾಹನ ಹಾಗೂ ಹಗಲು ವೇಳೆ ಭಾರಿ ವಾಹನ ಸಂಚಾರ ನಿಷೇಧಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

ಭಾರಿ ಮಳೆಯಿಂದಾಗಿ ಗುರುವಾರ ಮುಳಗಡೆಗೊಂಡಿದ್ದ, ಶಿಥಿಲಾವಸ್ಥೆಯಲ್ಲಿರುವ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕದ ಮುಳುಗು ಸೇತುವೆಯ ಬಳಿಗೆ ಶುಕ್ರವಾರ ಭೇಟಿ ನೀಡಿ ಸೇತುವೆಯ ವೀಕ್ಷಣೆ ನಡೆಸಿದರು. ಈ ವೇಳೆ ಸ್ಥಳೀಯರಿಂದ ಸೇತುವೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಸೇತುವೆ ಸಂಪೂರ್ಣವಾಗಿ ಶಿಥಿಲಾವಸ್ಥೆಯಲ್ಲಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಭದ್ರತೆಯ ದೃಷ್ಟಿಯಿಂದ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯ ವರೆಗೆ ರಸ್ತೆ ಬಂದ್ ಮಾಡಿ ಎಲ್ಲ ವಾಹನಗಳ ಸಂಚಾರ ನಿಷೇಧಿಸಲಾಗುವುದು. ಹಗಲು ವೇಳೆಯೂ ಬಸ್‌, ಲಾರಿ ಸೇರಿದಂತೆ ಭಾರಿ ವಾಹನ ಸಂಚಾರ ನಿಷೇಧಿಸಲಾಗುವುದು. ಮಳೆಗಾಲದಲ್ಲಿ ಯಾವುದೇ ಅವಘಡ ನಡೆಯದಂತೆ ಈ ಭದ್ರತಾ ಕ್ರಮ ಕೈಗೊಳ್ಳುವುದು ಅಗತ್ಯ ಎಂದರು.

ADVERTISEMENT

ಉಪವಿಭಾಗಾಧಿಕಾರಿ ಮತ್ತು ಅವರ ತಂಡ ಗ್ರಾಮ ಪಂಚಾಯಿತಿ ಜತೆಗೆ ಸಮನ್ವಯ ಸಾಧಿಸಿ ಪರ್ಯಾಯ ಮತ್ತು ರಕ್ಷಣಾ ವ್ಯವಸ್ಥೆ ಮಾಡಬೇಕಿದೆ. ಹಗಲು ವೇಳೆ ಸೇತುವೆಯ ಬಳಿ ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆಯಿಂದ ಪ್ರತಿ ದಿನ ಒಬ್ಬರು ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದರು.

ಟೆಂಡರ್ ಪ್ರಕ್ರಿಯೆ: ಲೋಕೋಪಯೋಗಿ ಇಲಾಖೆ ವತಿಯಿಂದ ಚೆಲ್ಯಡ್ಕ ಸೇತುವೆಯ ಪುನರ್ ನಿರ್ಮಾಣಕ್ಕಾಗಿ ಟೆಂಡರ್ ಪ್ರಕ್ರಿಯೆ ಆಗಿದೆ. ಚುನಾವಣಾ ನೀತಿ ಸಂಹಿತೆ ಇದ್ದುದರಿಂದ ನಿರ್ಮಾಣ ಕಾಮಗಾರಿ ಆರಂಭಿಸಲು ಸಾಧ್ಯವಾಗಿರಲಿಲ್ಲ. ಮಳೆಗಾಲ ಮುಗಿದ ಬಳಿಕ ಕಾಮಗಾರಿ ಆರಂಭಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಉಪವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ, ತಹಶೀಲ್ದಾರ್ ಪುರಂದರ ಹೆಗ್ಡೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್‌ಕುಮಾರ್‌ ಭಂಡಾರಿ, ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾಶ್ರೀ ಸರಳಿಕಾನ, ಸದಸ್ಯ ಪ್ರಕಾಶ್ ರೈ ಬೈಲಾಡಿ, ಒಳಮೊಗ್ರು ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ಕೇರಿ, ಪುತ್ತೂರು ತಾಲ್ಲೂಕು ಭೂನ್ಯಾಯ ಮಂಡಳಿ ಸದಸ್ಯ ಕೃಷ್ಣಪ್ರಸಾದ್ ಆಳ್ವ ಜತೆಗಿದ್ದರು.

ಗುರುವಾರ ಮುಳಗಡೆಗೊಂಡಿದ್ದ ಶಿಥಿಲವಾಗಿರುವ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಶೀಲನೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.