ಮಂಗಳೂರು: ‘ಬಿಜೆಪಿಯ ರಾಜ್ಯ ಮಟ್ಟದ ನಾಯಕರಿಂದ ಕರಾವಳಿಯ ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ. ಕರಾವಳಿ ಜಿಲ್ಲೆಯ ಮತದಾರರು ಏನಿದ್ದರೂ ಬಿಜೆಪಿಗೇ ಮತ ನೀಡುತ್ತಾರೆ ಎಂದು ಭಾವಿಸಿರುವ ಪಕ್ಷದ ಕೆಲ ಮುಖಂಡರು ಇಲ್ಲಿನ ನಾಯಕರನ್ನು ತುಳಿಯುತ್ತಿದ್ದಾರೆ’ ಎಂದು ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್ ಆರೋಪಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ಬಿಜೆಪಿಯ ರಾಜ್ಯ ಮಟ್ಟದ ನಾಯಕರ ಈ ಧೋರಣೆ ವಿರುದ್ಧ ಧ್ವನಿ ಎತ್ತಲು ನಾನು ಈ ಸಲ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೇನೆ. ಗೆಲ್ಲುವ ಭರವಸೆಯಿಂದಲೇ ಕಣಕ್ಕಿಳಿದಿದ್ದೇನೆಯೇ ಹೊರತು ಯಾರನ್ನೋ ಸೋಲಿಸಲು ಅಲ್ಲ’ ಎಂದರು.
‘ಕಾಂಗ್ರೆಸ್ನಲ್ಲಿದ್ದ ಗಾಡ್ ಫಾದರ್ ಸಂಸ್ಕೃತಿ ಈಗ ಬಿಜೆಪಿಗೂ ವ್ಯಾಪಿಸಿದೆ. ನಾಯಕರನ್ನು ಓಲೈಸಿದರೆ ಕೆಲಸ ಆಗುತ್ತದೆ. ಪಕ್ಷಕ್ಕಾಗಿ ದುಡಿಯುವವರಿಗೆ ಮನ್ನಣೆ ಸಿಗುತ್ತಿಲ್ಲ. ನನಗೆ ಟಿಕೆಟ್ ತಪ್ಪಿಸಿದ್ದು ಯಾರೆಂದು ತಿಳಿದಿದೆ. ಆದರೆ, ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ. ಸೊತರೂ ಗೆದ್ದರೂ ಬಿಜೆಪಿ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ’ ಎಂದರು.
‘ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 38 ಸಾವಿರಕ್ಕೂ ಹೆಚ್ಚು ಮತದಾರರಿದ್ದಾರೆ. ಶಾಸಕನಾಗಿ ನಾನು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವರಿಗೆ ಅರಿವಿದೆ. ಈ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ಬಳಕೆ ಆಗುವುದಿಲ್ಲ. ಅಭ್ಯರ್ಥಿಯ ಹೆಸರಿನ ಮುಂದೆ ಸಂಖ್ಯೆ ಉಲ್ಲೇಖಿಸಿ ಮತ ಚಲಾಯಿಸಲಾಗುತ್ತದೆ. ಹಾಗಾಗಿ ನಾನು ಗೆಲ್ಲುತ್ತೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.