ಮಂಗಳೂರು: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ನಿಂದಿಸಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಭರತ್ ಶೆಟ್ಟಿ ಕೊಳಕು ಬಾಯಿಯ ಶಾಸಕರು. ವೃತ್ತಿಯಲ್ಲಿ ವೈದ್ಯರಾಗಿರುವ ಭರತ್ ಶೆಟ್ಟಿ ರಾಹುಲ್ ಗಾಂಧಿ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ಇಡೀ ವೈದ್ಯ ಸಮೂಹಕ್ಕೆ ಅವಮಾನ ಮಾಡಿದ್ದಾರೆ ಎಂದರು.
ಇದೇ ರೀತಿ ಕೊಳಕು ಮಾತನಾಡುತ್ತಿದ್ದ ಈಶ್ವರಪ್ಪ ಮೂಲೆ ಸೇರಿದ್ದಾರೆ. ಶಾಸಕ ಭರತ್ ಶೆಟ್ಟಿ, ಈಶ್ವರಪ್ಪ ತಮ್ಮನಂತೆ ಮಾತನಾಡುತ್ತಿದ್ದಾರೆ. ರಾಹುಲ್ ಕೆನ್ನೆಗೆ ಬಾರಿಸುವ ಬಗ್ಗೆ ಮಾತನಾಡಿರುವ ಭರತ್ ಶೆಟ್ಟಿ, ತಮ್ಮ ಉತ್ತರ ವಿಧಾನಸಭಾ ಕ್ಷೇತ್ರದ ಒಬ್ಬ ಕಾಂಗ್ರೆಸ್ ಕಾರ್ಯಕರ್ತನನ್ನು ತಡೆದು ತೋರಿಸಲಿ. ನಮ್ಮ ಕಾರ್ಯಕರ್ತರು ಅದಕ್ಕೆ ಉತ್ತರ ಕೊಡಲು ತಯಾರಿದ್ದಾರೆ ಎಂದು ಎಚ್ಚರಿಸಿದರು.
ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೊ ಮಾತನಾಡಿ, ಶಾಸಕ ಭರತ್ ಶೆಟ್ಟಿ ಇದೇ ರೀತಿ ಮಾತನಾಡುತ್ತಿದ್ದರೆ, ಕಾಂಗ್ರೆಸ್ ಕಾರ್ಯಕರ್ತೆಯರೆಲ್ಕ ಸೇರಿ ಅವರಿಗೆ ಚಪ್ಪಲಿ ಹಾರ ಹಾಕುತ್ತೇವೆ ಎಂದರು.
ಕಾಂಗ್ರೆಸ್ ಕಾರ್ಯಕರ್ತರು ಕೆಲಹೊತ್ತು ರಸ್ತೆ ತಡೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.