ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ವೃದ್ಧ ದಂಪತಿ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.
ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಸರ್ವೆ ಸಂಖ್ಯೆ 123/1ರ ಸರ್ಕಾರಿ ಜಮೀನಿನಲ್ಲಿ ಪ್ರಸ್ತುತ ವಾಸವಾಗಿರುವ ಮುತ್ತುಸ್ವಾಮಿ (78) ಮತ್ತು ಅವರ ಪತ್ನಿ ರಾಧಮ್ಮ (66) ಅವರು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ, ‘ನಾವು ಚಿತ್ರದುರ್ಗದವರಾಗಿದ್ದು, ಕೂಲಿ ಕೆಲಸಕ್ಕಾಗಿ ಆರು ವರ್ಷಗಳ ಹಿಂದೆ ಈ ಪ್ರದೇಶಕ್ಕೆ ಬಂದು ನೆಲೆಸಿದ್ದೇವೆ. ನಾವು ವಾಸಿಸುತ್ತಿರುವ ಸರ್ಕಾರಿ ಜಮೀನಿನ ಸಂಬಂಧ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಮಗೆ ಶೀಘ್ರ ಇಲ್ಲಿಂದ ಜಾಗ ಖಾಲಿ ಮಾಡುವಂತೆ ಕಂದಾಯ ಇಲಾಖೆಯವರು ತಾಕೀತು ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.
‘ನಮ್ಮ ಬಳಿ ಯಾವುದೇ ಪಿತ್ರಾರ್ಜಿತ ಆಸ್ತಿ ಇಲ್ಲ. ಸರ್ಕಾರಿ ಭೂಮಿಯಲ್ಲಿ ನಾವು ನಿರ್ಮಿಸಿದ ಮನೆಯಲ್ಲಿ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ವೃದ್ಧರಾದ ನಮಗೆ ದಯಾಮರಣ ಅಥವಾ ಇನ್ನಾವುದೇ ರೀತಿಯ ಒಳ್ಳೆಯ ಮರಣಕ್ಕೆ ಅವಕಾಶ ನೀಡಬೇಕು’ ಎಂದು ವಿನಂತಿಸಿದ್ದಾರೆ.
‘ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ ಕಾರಣ ದಂಪತಿಗೆ ತೆರವು ಮಾಡುವಂತೆ ನೋಟಿಸ್ ನೀಡಲಾಗಿದ್ದು, ಈ ಬಗ್ಗೆ ಪರಿಶೀಲಿಸುತ್ತೇವೆ’ ಎಂದು ತಹಶೀಲ್ದಾರ್ ಪ್ರಭಾಕರ ಕಾಜೂರೆ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.