ಮಂಗಳೂರು: ಕಂಕನಾಡಿ ಮಸೀದಿಯೊಂದರ ಬಳಿಯ ರಸ್ತೆಯಲ್ಲಿ ನಮಾಜ್ ಮಾಡಿರುವ ಸಂಬಂಧ ಪೊಲೀಸರು ದಾಖಲಿಸಿದ್ದ ಸುಮೊಟೊ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಪೊಲೀಸರು ಪುನಃ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ಒತ್ತಾಯಿಸಿದೆ.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಮಂಗಳೂರು ಗ್ರಾಮಾಂತರ ಘಟಕದ ಜಿಲ್ಲಾ ಸಂಚಾಲಕ ನರಸಿಂಹ ಮಾಣಿ, ಪ್ರಕರಣಕ್ಕೆ ಸಂಬಂಧಿಸಿ ಬಿ ರಿಪೋರ್ಟ್ ಹಾಕಿಸುವ ಮೂಲಕ ಸರ್ಕಾರ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದೆ. ಪೊಲೀಸರು ಸರಿಯಾಗಿ ಕರ್ತವ್ಯ ನಿರ್ವಹಿಸಲು ಬಿಡಬೇಕು. ಅದು ಸಾಧ್ಯವಾಗದಿದ್ದರೆ ಇಲಾಖೆಯನ್ನೇ ಬರ್ಕಾಸ್ತು ಮಾಡಲಿ ಎಂದರು.
ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಕ್ರಮವಾಗಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಆಗಬಹುದಾದ ಅನಾಹುತಗಳಿಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಹೊಣೆಯಾಗಲಿದೆ ಎಂದರು.
ರಾಜ್ಯದಲ್ಲಿ ಪೊಲೀಸರ ಮೇಲೆ ಹಲ್ಲೆ, ಠಾಣೆಗಳ ಮೇಲೆ ದಾಳಿ ಮೊದಲಾದ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಮತಾಂಧರು ಪೊಲೀಸರನ್ನು ಗುರಿಯಾಗಿಸಿಕೊಂಡಿದ್ದಾರೆ. ಪೊಲೀಸರಿಗೂ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವವರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದರು. ಸಂಘಟನೆಯ ಸಮಿತ್ ರಾಜ್ ಧರೆಗುಂಡಿ, ಹರ್ಷಿತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.