ಮಂಗಳೂರು: ‘ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರ ಬದಲಾವಣೆ ವಿಚಾರವನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಪಕ್ಷ ಹೊಣೆಗಾರಿಕೆ ನೀಡಿದರೆ ನಿಭಾಯಿಸುತ್ತೇನೆ. ಆದರೆ, ಆ ಹುದ್ದೆಗಾಗಿ ಲಾಬಿ ಮಾಡುವುದಿಲ್ಲ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್ ಹೇಳಿದರು.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಪಕ್ಷ ನೀಡಿರುವ ಎಲ್ಲ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿದ್ದೇನೆ’ ಎಂದರು.
ವಿಧಾನ ಪರಿಷತ್ ಸ್ಥಾನಕ್ಕೆ ಕೂಡ ನಿಮ್ಮ ಹೆಸರು ಕೇಳಿ ಬಂದಿತ್ತಲ್ಲ ಎಂದು ಪತ್ರಕರ್ತರು ಕೇಳಿದಾಗ, ‘ಹಲವಾರು ವರ್ಷ ಪಕ್ಷದಲ್ಲಿ ಕೆಲಸ ಮಾಡಿದವರಿಗೆ ಶಾಸಕನಾಗಬೇಕು ಎಂಬ ಆಸೆ ಇರುವುದು ಸಹಜ. ಆದರೆ, ಹಣೆಯಲ್ಲಿ ಬರೆದಿರಬೇಕು’ ಎಂದರು.
‘ಐದು ಜಿಲ್ಲೆಗಳ ಉಸ್ತುವಾರಿ ಹೊಣೆಯನ್ನು ಪಕ್ಷ ನೀಡಿದ್ದು, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಲಾಗುವುದು. ಈ ಹಿಂದೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅತಿಹೆಚ್ಚು ಸ್ಥಾನಗಳನ್ನು ಹೊಂದಿತ್ತು. ಮತ್ತೆ ಇತಿಹಾಸ ಮರುಕಳಿಸುವಂತಾಗಬೇಕು’ ಎಂದರು.
ಪಕ್ಷದ ಪ್ರಮುಖರಾದ ನೀರಜ್ ಪಾಲ್, ಟಿ.ಕೆ. ಸುಧೀರ್, ಸುಭಾಷ್ ಶೆಟ್ಟಿ, ನಜೀರ್ ಬಜಾಲ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.