ಮುಡಿಪು: ಆಧುನಿಕತೆಯ ನಾಗಾಲೋಟದಲ್ಲಿ ಮನುಷ್ಯನ ದೈನಂದಿನ ಜೀವನಶೈಲಿಯಲ್ಲಿ ಏರಪೇರಾಗಿ ಹಲವು ಆರೋಗ್ಯ ಸಮಸ್ಯೆಗಳು ಆವರಿಸಿಕೊಳ್ಳುತ್ತಿವೆ ಎಂದು ಯೆನೆಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.ಗುರುರಾಜ್ ಎಚ್. ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯ ಶಿಕ್ಷಕೇತರ ಉದ್ಯೋಗಿಗಳ ಸಂಘ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ನರಿಂಗಾನದ ಯೆನೆಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಆಶ್ರಯದಲ್ಲಿ ದಿ.ಮಾಧವ ಸೋಮೇಶ್ವರ ಅವರ ಜನ್ಮದಿನೋತ್ಸವದ ಪ್ರಯುಕ್ತ ಮಂಗಳವಾರ ಮಂಗಳೂರು ವಿವಿಯಲ್ಲಿ ನಡೆದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಮಂಗಳೂರು ವಿಶ್ವವಿದ್ಯಾನಿಲಯ ಶಿಕ್ಷಕೇತರ ಉದ್ಯೋಗಿಗಳ ಸಂಘವು ದಿ.ಮಾಧವ ಸೋಮೇಶ್ವರ ಅವರ ಜನ್ಮದಿನೋತ್ಸವದ ಅಂಗವಾಗಿ ಪ್ರತಿ ವರ್ಷ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.
ಕುಲಸಚಿವ (ಪರೀಕ್ಷಾಂಗ) ಪ್ರೊ.ದೇವೇಂದ್ರಪ್ಪ ಎಚ್. ಮಾತನಾಡಿ, ಇಂದಿನ ಒತ್ತಡದ ಬದುಕಿನಲ್ಲಿ ನಾವು ಹೊರಗಿನ ತಿಂಡಿ, ತಿನಿಸುಗಳಿಗೆ ಆಕರ್ಷಿತರಾಗುವುದರಿಂದ ಕಾಯಿಲೆಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ನಾವು ಜಾಗೃತರಾಗಬೇಕಿದೆ ಎಂದರು.
ಕುಲಪತಿ ಪ್ರೊ.ಪಿ.ಎಲ್.ಧರ್ಮ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಅಚ್ಯುತಗಟ್ಟಿ, ಕೊಣಾಜೆ ಪಂಚಾಯಿತಿ ಅಧ್ಯಕ್ಷೆ ಗೀತಾ ಕುಂದರ್ ಭಾಗವಹಿಸಿದ್ದರು.
ಮಂಗಳೂರು ವಿವಿ ಶಿಕ್ಷಕೇತರ ಉದ್ಯೋಗಿಗಳ ಸಂಘದ ಅಧ್ಯಕ್ಷ ವಿಜಯರಾಜು ಸ್ವಾಗತಿಸಿದರು. ಮಾಧವ ಸೋಮೇಶ್ವರ ವೈದ್ಯಕೀಯ ನೆರವು ಸಂಘದ ಅಧ್ಯಕ್ಷ ಹರೀಶ್ ಕುಮಾರ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಎಂ.ಬಿ. ಕಾರ್ಯಕ್ರಮ ನಿರೂಪಿಸಿದರು.
ಕುಲಪತಿ ಪ್ರೊ.ಪಿ.ಎಲ್ ಧರ್ಮ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ಶಿಬಿರದಲ್ಲಿ ತಜ್ಞ ವೈದ್ಯರಿಂದ ಉಚಿತ ತಪಾಸಣೆ, ಸೂಕ್ತ ಸಲಹೆ ಹಾಗೂ ಔಷಧಿ ನೀಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.