ಮಂಗಳೂರು: ಕಂಕನಾಡಿ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ನಡೆಸಿದ ಬಗ್ಗೆ ಕದ್ರಿಯ ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
‘ಕಂಕನಾಡಿಯ ಮಸೀದಿಯೊಂದರ ಮುಂಭಾಗದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಅಪರಿಚಿತರು ಇದೇ 24ರಂದು ಪ್ರಾರ್ಥನೆ ಸಲ್ಲಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರ ಗೊಂಡಿದೆ. ಈ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 341 (ಅಕ್ರಮವಾಗಿ ನಿರ್ಬಂಧಿಸುವುದು), 283 (ಸಾರ್ವಜನಿಕ ರಸ್ತೆಯನ್ನು ಸ್ವಾಧೀನಕ್ಕೆ ಪಡೆದು ಜನರಿಗೆ ಅಡ್ಡಿಪಡಿಸುವುದು), 143 (ಅಕ್ರಮ ಕೂಟ ರಚನೆ) ಹಾಗೂ 149ರ (ಉದ್ದೇಶಪೂರ್ವಕವಾಗಿ ಕೃತ್ಯವೆಸಗುವುದು) ಅಡಿ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ. ಈ ಬಗ್ಗೆ ತನಿಖೆ ನಡೆಸಿ ಈ ಕೃತ್ಯವೆಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ’ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ನಮಾಜ್ ಮಾಡಿದ ಬಗ್ಗೆ ವಿಎಚ್ಪಿ ಪ್ರಮುಖರು ಕದ್ರಿ ಪೊಲೀಸ್ ಠಾಣೆಗೆ ಮಂಗಳವಾರ ದೂರು ನೀಡಿದ್ದಾರೆ.
‘ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ. ಈ ಕೃತ್ಯವೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.
‘ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡಲಾಗುವುದು’ ಎಂದು ವಿಎಚ್ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.