ಮಂಗಳೂರು: ಇಲ್ಲಿನ ಕದ್ರಿ ಹಿಲ್ಸ್ ಯುದ್ಧ ಸ್ಮಾರಕದ ಅಭಿವೃದ್ಧಿಗೆ ತಮ್ಮ ಒಂದು ತಿಂಗಳ ವೇತನ ನೀಡುವುದಾಗಿ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಕದ್ರಿ ಹಿಲ್ಸ್ನಲ್ಲಿರುವ ಯುದ್ಧ ಸ್ಮಾರಕದ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ನಾಳೆಯೇ ಒಂದು ತಿಂಗಳ ವೇತನ ಮೊತ್ತದ ಚೆಕ್ (₹1 ಲಕ್ಷ) ಕಳುಹಿಸುವುದಾಗಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರಿಗೆ ತಿಳಿಸಿದರು.
ವಿಜಯಪುರ, ಬೆಳಗಾವಿ ಹೊರತುಪಡಿಸಿದರೆ ಮಂಗಳೂರಿನಲ್ಲಿ ಮಾತ್ರ ಇಂತಹ ಸ್ಮಾರಕ ಇದೆ. ದೇಶದ ಗಡಿ ಕಾಯುವ ವೇಳೆ ಅನಿರೀಕ್ಷಿತವಾಗಿ ಸಾವನ್ನಪ್ಪಿದ ಯೋಧರ ಅನೇಕ ಕುಟುಂಬಗಳು ಇಂದಿಗೂ ನೋವಿನಲ್ಲಿವೆ. ಯೋಧರ ಕುಟುಂಬದವರು ಸ್ಮಾರಕಗಳಿಗೆ ಬಂದಾಗ ಅವರಿಗೆ ನೆಮ್ಮದಿ ಸಿಗುತ್ತದೆ. ಈ ಸ್ಮಾರಕವನ್ನು ಚೆನ್ನಾಗಿ ಅಭಿವೃದ್ಧಿ ಮಾಡಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಯುದ್ಧ ಸ್ಮಾರಕ ಅಭಿವೃದ್ಧಿಗೆ ನೆರವು ನೀಡುವುದಾಗಿ ಘೋಷಿಸಿದರು.
ಯುದ್ಧ ಸ್ಮಾರಕ ಅಭಿವೃದ್ಧಿಗೆ ಶಾಸಕ ವೇದವ್ಯಾಸ ಕಾಮತ್ ಅವರ ವಿಶೇಷ ಅನುದಾನದಲ್ಲಿ ₹25 ಲಕ್ಷ ದೊರೆತಿದ್ದು, ಹೆಚ್ಚುವರಿ ಹಣ ಅಗತ್ಯವಿದ್ದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಭರಿಸಲಾಗುವುದು ಎಂದು ಸುಧೀರ್ ಶೆಟ್ಟಿ ತಿಳಿಸಿದರು.
ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮಾಜಿ ಯೋಧರ ಸಂಘದ ಅಧ್ಯಕ್ಷ ಶ್ರೀಕಾಂತ್, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಪಾಲಿಕೆ ಸದಸ್ಯರಾದ ಶಕೀಲಾ ಕಾವ, ದಿವಾಕರ ಪಾಂಡೇಶ್ವರ, ಪ್ರಮುಖರಾದ ರಮೇಶ್ ಕಂಡೆಟ್ಟು, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ವಿಜಯ್ ಕುಮಾರ್ ಶೆಟ್ಟಿ, ಅಶ್ವಿತ್ ಕೊಟ್ಟಾರಿ, ಕಮಲಾಕ್ಷಿ, ಕುಸುಮಾ ದೇವಾಡಿಗ, ಸಂಧ್ಯಾ ವೆಂಕಟೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.