ಮೂಡುಬಿದಿರೆ: ‘ಪ್ರಧಾನಿ ನರೇಂದ್ರ ಮೋದಿ ಅವರು ಜಾರಿ ನಿರ್ದೇಶನಾಲಯ (ಇ.ಡಿ.) ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ರಾಜಕಾರಣಿಗಳನ್ನು ಆಟ ಆಡಿಸುತ್ತಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷವನ್ನು ನಾಶಮಾಡುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ. ಅದು ಬಿಜೆಪಿಯಿಂದ ಅಸಾಧ್ಯ’ ಎಂದು ಕಾಂಗ್ರೆಸ್ ಮುಖಂಡ ಅಭಯಚಂದ್ರ ಜೈನ್ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿ ಮೂಲಕ ಬಡವರ ಹಸಿವು ನೀಗಿಸುವ, ಜನಸಾಮಾನ್ಯರಿಗೆ ಶಕ್ತಿ ನೀಡುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಬಿಜೆಪಿ ಹಿಂದುತ್ವದ ಕಾರ್ಯಸೂಚಿಯೊಂದಿಗೆ ಚುನಾವಣೆ ಎದುರಿಸುತ್ತಿದೆ. ಹಿಂದುತ್ವದ ಪ್ರತಿಪಾದನೆ ಸುಲಭ. ಆದರೆ, ಬಡವರಿಗೆ ಸ್ಪಂದಿಸುವುದು ಕಷ್ಟ ಎಂದರು.
ಬಿಜೆಪಿಗೆ ಬಡವರ ಸಂಕಷ್ಟ ಗೊತ್ತಿಲ್ಲ. ಬಡವರಿಗೆ ಶಿಕ್ಷಣ, ಆರೋಗ್ಯ, ಸೂರು ಕೊಡಬೇಕೆಂಬ ಉದ್ದೇಶ ಬಿಜೆಪಿಗೆ ಇಲ್ಲ. ಹಿಂದುತ್ವ, ಶ್ರೀರಾಮ ಕೇವಲ ಬಿಜೆಪಿ ಸ್ವತ್ತಲ್ಲ. ಹಿಂದೂ ಸಂಸ್ಕೃತಿಯ ಬಗ್ಗೆ ಭಾಷಣ ಮಾಡುವ ಬಿಜೆಪಿ ನಾಯಕರು ತಮ್ಮ ಮಕ್ಕಳನ್ನು ವಿದೇಶದ ಬದಲು ಗುರುಕುಲದಲ್ಲಿ ಓದಿಸಬಹುದಲ್ಲವೆ ಎಂದರು.
ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಇದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಪದ್ಮರಾಜ್ ಅವರು ಸೌಮ್ಯವಾದಿಯಾಗಿದ್ದಾರೆ. ಅವರು ಮೂಡುಬಿದಿರೆ ವಿಧಾನಸಭೆ ಕ್ಷೇತ್ರದಲ್ಲಿ ಹೆಚ್ಚು ಮತ ಗಳಿಸಲಿದ್ದಾರೆ. ಉಡುಪಿ ಲೋಕಸಭೆ ಕ್ಷೇತ್ರದಲ್ಲಿ ಅನುಭವಿ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಗೆಲುವಿನ ಅವಕಾಶ ಹೆಚ್ಚಿದೆ ಎಂದರು.
ಪುರಸಭೆ ಸದಸ್ಯ ಸುರೇಶ್ ಪ್ರಭು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.