ADVERTISEMENT

ಮಂಗಳೂರು: ಜನಜಾಗೃತಿ ರಥಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2023, 14:42 IST
Last Updated 5 ಡಿಸೆಂಬರ್ 2023, 14:42 IST
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದ ‘ಜನಜಾಗೃತಿ ರಥ’ಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಚಾಲನೆ ನೀಡಿದರು
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದ ‘ಜನಜಾಗೃತಿ ರಥ’ಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಚಾಲನೆ ನೀಡಿದರು   

ಮಂಗಳೂರು: ‘ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರುವಂತೆ ಪ್ರೇರೇಪಿಸಿ, ಕಡ್ಡಾಯವಾಗಿ ಶಿಕ್ಷಣ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಕರೆ ನೀಡಿದರು.

ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಆಶ್ರಯದಲ್ಲಿ, ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ರಡಿ ‘ಜನಜಾಗೃತಿ ರಥ’ಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಮಕ್ಕಳ ಕೈಯಿಂದ ಕೆಲಸ ಮಾಡಿಸುವುದು ಅವರ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಬಾಲಕಾರ್ಮಿಕ ಪದ್ಧತಿ ತೊಡೆದುಹಾಕುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳು ಕೈಜೋಡಿಸಬೇಕು’ ಎಂದರು.

ADVERTISEMENT

ಬಾಲಕಾರ್ಮಿಕ ಯೋಜನಾ ಸಂಘದ ಸಹಾಯಕ ಕಾರ್ಮಿಕ ಆಯುಕ್ತ ಹಾಗೂ ಸದಸ್ಯ ಕಾರ್ಯಾದರ್ಶಿ ಶಿವಕುಮಾರ್ ಬಿ. ಮಾತನಾಡಿ, ‘ಬಾಲಕಾರ್ಮಿಕ ಪದ್ಧತಿಯು ಸಾಮಾಜಿಕ ಪಿಡುಗು. ಅದನ್ನು ಹೋಗಲಾಡಿಸಲು ವಿವಿಧ ಇಲಾಖೆಗಳ ನಿರೀಕ್ಷಕರು, 100ಕ್ಕೂ ಅಧಿಕ ಹಠಾತ್ ದಾಳಿಗಳನ್ನು ಮಾಡಿ ಅರಿವು ಮೂಡಿಸಿದ್ದಾರೆ. ಬಾಲಕಾರ್ಮಿಕ ಕಾಯ್ದೆಯ ಬಗ್ಗೆ ಅರಿವು ಮೂಡಿಸಲು ಜಾಗೃತಿ ರಥವು 9 ದಿನಗಳ ಕಾಲ ಪ್ರತಿ ತಾಲ್ಲೂಕಿನಲ್ಲಿ ಸಂಚರಿಸಿ, ಮಾಹಿತಿ ನೀಡಲಿದೆ’ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಸದಸ್ಯ ಕಾರ್ಯದರ್ಶಿ ಶೋಭ ಬಿ.ಜಿ. ಭಾಗವಹಿಸಿದ್ದರು.

ದ.ಕ ಉಪವಿಭಾಗ-1ರ ಕಾರ್ಮಿಕ ಅಧಿಕಾರಿ ಕಾವೇರಿ ಟಿ., ಉಪವಿಭಾಗ-2 ರ ಕಾರ್ಮಿಕ ಅಧಿಕಾರಿ, ವಿಲ್ಮಾ ಎಲಿಜಬೆತ್ ತಾವ್ರೊ, ಹಿರಿಯ ಕಾರ್ಮಿಕ ನಿರೀಕ್ಷಕರು ಹಾಗೂ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.