ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ 34-ನೆಕ್ಕಿಲಾಡಿಯಲ್ಲಿ ಟ್ಯಾಂಕರ್ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮಗು ಸಹಿತ ದಂಪತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸರಳೀಕಟ್ಟೆಯ ಉರ್ಲಡ್ಕ ನಿವಾಸಿಗಳಾದ ನೆಕ್ಕಿಲಾಡಿಯ ಮಹಮ್ಮದ್ ಶರೀಫ್, ಅವರ ಪತ್ನಿ ಆಯಿಷಾ ತಸ್ಲೀಮಾ ಹಾಗೂ ಮಗು ಮುಹಮ್ಮದ್ ರಫಿ ಗಾಯಗೊಂಡವರು.
ಮಹಮ್ಮದ್ ಶರೀಫ್ ಅವರ ಕಾಲಿಗೆ ಹಾಗೂ ಆಯಿಷಾ ತಸ್ಲೀಮಾ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಮಗು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದೆ.
ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಕ್ಕಿಲಾಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ಫ್ಲೈ ಓವರ್ ಬಳಿ ಈ ಅಪಘಾತ ಸಂಭವಿಸಿದೆ. ವಾಹನವೊಂದನ್ನು ಹಿಂದಿಕ್ಕಿಕೊಂಡು ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತ ನಡೆದ ಬಳಿಕ ಚಾಲಕ ಟ್ಯಾಂಕರ್ನಿಂದ ಇಳಿದು ಓಡಲು ಯತ್ನಿಸಿದ್ದು, ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.