ADVERTISEMENT

ಸರಳತೆ ಕಲಿಸಿದ ಸದ್ಯೋಜಾತ ಸ್ವಾಮೀಜಿ: ಚನ್ನಮಲ್ಲಿಕಾರ್ಜುನ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2024, 5:25 IST
Last Updated 5 ಮಾರ್ಚ್ 2024, 5:25 IST
ದಾವಣಗೆರೆಯ ಸದ್ಯೋಜಾತ ಮಠದಲ್ಲಿ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಎಡೆಯೂರು ರೇಣುಕ ಶಿವಾಚಾರ್ಯ ಸ್ವಾಮೀಜಿ, ರಟ್ಟೀಹಳ್ಳಿಯ ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಹೊನ್ನಾಳಿ ಕಲ್ಮಠದ ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ದೀಪ ಬೆಳಗಿಸಿ ಉದ್ಘಾಟಿಸಿದರು
–ಪ್ರಜಾವಾಣಿ ಚಿತ್ರ
ದಾವಣಗೆರೆಯ ಸದ್ಯೋಜಾತ ಮಠದಲ್ಲಿ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಎಡೆಯೂರು ರೇಣುಕ ಶಿವಾಚಾರ್ಯ ಸ್ವಾಮೀಜಿ, ರಟ್ಟೀಹಳ್ಳಿಯ ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಹೊನ್ನಾಳಿ ಕಲ್ಮಠದ ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ದೀಪ ಬೆಳಗಿಸಿ ಉದ್ಘಾಟಿಸಿದರು –ಪ್ರಜಾವಾಣಿ ಚಿತ್ರ   

ದಾವಣಗೆರೆ: ಅಖಿಲ ಭಾರತ ಶಿವಾಚಾರ್ಯ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಯು ಭಕ್ತರಿಗೆ ಸರಳತೆಯ ಬದುಕನ್ನು ಕಲಿಸಿದ್ದಾರೆ ಎಂದು ಹೊನ್ನಾಳಿಯ ಕಲ್ಮಠದ ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಹಿರೇಮಠದಲ್ಲಿ ಸೋಮವಾರ ನಡೆದ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮೀಜಿಯ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸದ್ಯೋಜಾತ ಸ್ವಾಮೀಜಿ ವಿದ್ಯಾರ್ಥಿಗಳಿಗೆ ವಿದ್ಯಾ ಗುರುವಾಗಿ, ಭಕ್ತರಿಗೆ ಸನ್ಮಾರ್ಗದರ್ಶಿ ಗುರುವಾಗಿದ್ದರು. ಅವರು ಬದುಕನ್ನು ಬಂದ ಹಾಗೆಯೇ ಸ್ವೀಕರಿಸಿದರು. ಕೊನೆಯ ದಿನಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸೂಚಿಸಿದರೂ, ಅವರು ಒಪ್ಪಲಿಲ್ಲ. ಭಗವಂತನ ಇಚ್ಛೆ ಇರುವಷ್ಟು ದಿನ ಬದುಕುತ್ತೇನೆ ಎಂದಿದ್ದರು’ ಎಂದು ನೆನಪಿಸಿಕೊಂಡರು.

ADVERTISEMENT

‘ತಂದೆ ತಾಯಿ, ಗುರು ಹಿರಿಯರನ್ನು, ಮಹಾತ್ಮರನ್ನು ನೆನೆಸಿಕೊಂಡರೆ ಆಯುಷ್ಯ, ಕೀರ್ತಿ, ಯಶಸ್ಸು, ಬಲ ದೊರೆಯುತ್ತದೆ’ ಎಂದು ಹೇಳಿದರು.

‘ಸದ್ಯೋಜಾತ ಸ್ವಾಮೀಜಿ ಕಾಯಕಜೀವಿಯಾಗಿದ್ದರು. ಅವರ ಕೆಲಸಗಳನ್ನು ಅವರೇ ಮಾಡಿಕೊಳ್ಳುತ್ತಿದ್ದರು. ಅವರ ಸಾಮಾಜಿಕ ಕಳಕಳಿಯ ವಿಚಾರಗಳನ್ನು ಅಳವಡಿಸಿಕೊಳ್ಳಬೇಕಿದೆ’ ಎಂದು ಜವಳಿ ಉದ್ಯಮಿ ಬಿ.ಸಿ.ಉಮಾಪತಿ ಅಭಿಪ್ರಾಯಪಟ್ಟರು.

ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ, ರಟ್ಟೀಹಳ್ಳಿಯ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ವಿಜಯಕುಮಾರ್ ಎಚ್‌.ಜಿ. ಉಪನ್ಯಾಸ ನೀಡಿದರು.

ವಿಜಯ ಹಿರೇಮಠ ಹಾಗೂ ಗುರು ಪಂಚಾಕ್ಷರ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಾಸವಿ ಯುವತಿಯರ ಭಜನಾ ಮಂಡಳಿ ಸದಸ್ಯೆಯರು ಸಂಗೀತ ಸೇವೆ ನಡೆಸಿಕೊಟ್ಟರು.

ಸೃಷ್ಟಿ ವೈ.ಕೆ., ನಮ್ರತಾ, ಶಿವರಾಜ್‌ ಎನ್‌.ಎಂ. ಯೋಗ ನೃತ್ಯ ಪ್ರದರ್ಶಿಸಿದರು. ಬಾಪೂಜಿ ಬಿ ಸ್ಕೂಲ್‌ನ ನಿರ್ದೇಶಕ ಸ್ವಾಮಿ ತ್ರಿಬುವಾನಂದ ಸ್ವಾಗತಿಸಿ, ಅರ್ಚನಾ ಎಸ್‌. ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.