ದಾವಣಗೆರೆ: ‘ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರಿಗೆ ರಾಜಕೀಯದಲ್ಲಿ ಶೇ 33ರಷ್ಟು ಮೀಸಲಾತಿ ನೀಡುವ ಮೂಲಕ ಮಹಿಳಾ ಶಕ್ತಿಗೆ ಮುನ್ನುಡಿ ಬರೆದಿದ್ದಾರೆ’ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತಿಳಿಸಿದರು.
ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮಂಗಳವಾರ ಪ್ರಚಾರ ನಡೆಸಿದ ಅವರು, ‘ಪ್ರಧಾನಿ ಮೋದಿ ಅವರು ಶಿಕ್ಷಣ, ಮಹಿಳಾ ಸ್ವಾವಲಂಬನೆಗೆ ಸಾಕಷ್ಟು ಯೋಜನೆ ಜಾರಿಗೊಳಿಸಿದ್ದಾರೆ. ಬೇಟಿ ಬಚಾವೋ, ಬೇಟಿ ಪಡಾವೋ ಮೂಲಕ ಕೋಟ್ಯಂತರ ಹಣ್ಣು ಮಕ್ಕಳ ಪಾಲಿಗೆ ಆಶಾ ಕಿರಣವಾಗಿದ್ದಾರೆ’ ಎಂದರು.
‘ಸಂಸದ ಜಿ.ಎಂ.ಸಿದ್ದೇಶ್ವರ ಅವರು ಕೋಟ್ಯಂತರ ರೂಪಾಯಿ ಅನುದಾನ ತಂದಿದ್ದಾರೆ. ಇದುವರೆಗೂ ಪಾರದರ್ಶಕ ಆಡಳಿತ ನೀಡಿದ್ದಕ್ಕೆ ಲೋಕಸಭಾ ಕ್ಷೇತ್ರದ ಮತದಾರರು ನಮ್ಮನ್ನು ಆರಿಸಿ ಲೋಕಸಭೆಗೆ ಕಳುಹಿಸಿದ್ದಾರೆ. ಈ ಬಾರಿಯೂ ನನಗೆ ಮತ ನೀಡುವ ಮೂಲಕ ಅಭಿವೃದ್ಧಿ ಮತ್ತು ಪಾರದರ್ಶಕ ಆಡಳಿತಕ್ಕೆ ಮತ್ತೊಮ್ಮೆ ಅವಕಾಶ ನೀಡಿ’ ಎಂದು ಮನವಿ ಮಾಡಿದರು.
ಹೊಸ ಬೆಳವನೂರು ಗ್ರಾಮದ ಗಣಪತಿ, ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಹೊಸ ತುರ್ಚಘಟ್ಟ ಗ್ರಾಮದಲ್ಲಿ ತೆರೆದ ವಾಹನದಲ್ಲಿ ಪ್ರಚಾರ ನಡೆಸಿದರು. ಕೈದಾಳೆ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಕುಕ್ಕುವಾಡ, ಹೊಸಕೊಳೇನಹಳ್ಳಿ, ನಾಗರಸನಹಳ್ಳಿ, ಕನಗೊಂಡನಹಳ್ಳಿ, ಹದಡಿ, ಮುದಹದಡಿ, ಜರೇಕಟ್ಟೆ, ನಾಗನೂರು ಸೇರಿದಂತೆ 15ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.
ಜೆಡಿಎಸ್ ಹಿರಿಯ ಮುಖಂಡ ನಾಗೇಶ್ವರರಾವ್, ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸ್ ಕರಿಯಪ್ಪ, ವಿಜಯ್ ಕುಮಾರ್, ಗುರು ಪ್ರಸಾದ್, ಗುರುಮೂರ್ತಿ, ದಕ್ಷಿಣ ಅಧ್ಯಕ್ಷ ಆನಂದ್ ರಾವ್ ಸಿಂಧೆ, ರಾಜು ನೀಲಗುಂದ, ಡಿ.ಎಲ್.ಶಿವಪ್ರಕಾಶ್ ಮತ್ತು ಎಲ್ಲ ಗ್ರಾಮಗಳ ಮುಖಂಡರು ಪ್ರಚಾರಕ್ಕೆ ಸಾಥ್ ನೀಡಿದ್ದರು.
ಎಚ್ಡಿಕೆ ಆರೋಗ್ಯ ವಿಚಾರಿಸಿದ ಜಿ.ಎಂ.ಸಿದ್ದೇಶ್ವರ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಎಚ್.ಡಿ.ಕುಮಾರಸ್ವಾಮಿ ಮಾತನಾಡಿ ‘ದಾವಣಗೆರೆಯಲ್ಲೂ ಜೆಡಿಎಸ್ ಕಾರ್ಯಕರ್ತರು ಮುಖಂಡರು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರನ್ನು ಗೆಲ್ಲಿಸಲು ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಮಾಜಿ ಸಚಿವ ಮುರುಗೇಶ್ ನಿರಾಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.