ಚನ್ನಗಿರಿ: ‘ಇಂದಿನ ದಿನಮಾನದಲ್ಲಿ ಬಹುತೇಕ ಯುವಕರು ದುಶ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಪಾದಯಾತ್ರೆ ಕೈಗೊಳ್ಳುವುದರಿಂದ ದುಶ್ಚಟಗಳಿಗೆ ಕಡಿವಾಣ ಹಾಕಲು ಸಾಧ್ಯ. ಮನಸ್ಸೂ ನಿರ್ಮಲವಾಗುತ್ತದೆ’ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ತೇಜಸ್ವಿ ಪಟೇಲ್ ತಿಳಿಸಿದರು.
ಕೊಟ್ಟೂರಿನಲ್ಲಿ ಮಾ. 4ರಂದು ಗುರು ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ನಡೆಯಲಿದ್ದು, ತಾಲ್ಲೂಕಿನಿಂದ ಸಹಸ್ರಾರು ಭಕ್ತರು ಅಲ್ಲಿಗೆ ಪಾದಯಾತ್ರೆ ಕೈಗೊಳ್ಳುತ್ತಾರೆ. ಪ್ರತಿ ವರ್ಷ ಪಾದಯಾತ್ರಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಐದು ದಿನಗಳ ಕಾಲ ಪಾದಯಾತ್ರೆ ಕೈಗೊಂಡು ನಂತರ ರಥೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಈ ತಾಲ್ಲೂಕಿನಲ್ಲಿ ಪಾದಯಾತ್ರೆ 25 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದ್ದು, ಪ್ರಸ್ತುತ ವರ್ಷ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸ್ವಾಗತಾರ್ಹ ಎಂದರು.
ಪುರಸಭೆ ಮಾಜಿ ಸದಸ್ಯ ಚ.ಮ. ಗುರುಸಿದ್ದಯ್ಯ, ರೇಣುಕಾ ಸ್ವಾಮಿ, ಸಾಗರದ ಶಿವಲಿಂಗಪ್ಪ, ಮಹೇಶ್ ಜವಳಿ, ಜ್ಯೋತಿ ಕೋರಿ, ಕವಿತಾ, ಹಾಲಸ್ವಾಮಿ, ಕೋರಿ ದೀಪಕ್, ಅಖಿಲ ಭಾರತ ವೀರಶೈವ ಪುರೋಹಿತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಬೂದಿಸ್ವಾಮಿ ಹಿರೇಮಠ್, ನವೀನ್ ಕುಮಾರ್, ನೀಲಕಂಠಯ್ಯ ಶಾಸ್ತ್ರೀ ಉಪಸ್ಥಿತರಿದ್ದರು.
ಹಾಲಸ್ವಾಮಿ ವಿರಕ್ತ ಮಠದ ಬಸವಜಯಚಂದ್ರ ಸ್ವಾಮೀಜಿ, ಹಿರೇಮಠದ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು.
ಜಿಲ್ಲಾ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಎಂ.ಬಿ. ನಾಗರಾಜ್ ಕಾಕನೂರು ಉಪನ್ಯಾಸ ನೀಡಿದರು. ಪಾದಯಾತ್ರೆ ಸಮಿತಿ ಅಧ್ಯಕ್ಷ ಬಸವರಾಜ್ ಕೋರಿ ಅಧ್ಯಕ್ಷತೆ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.