ADVERTISEMENT

ಅಭಿವೃದ್ಧಿ ಮರೆತ ಕಾಂಗ್ರೆಸ್: ಗಾಯತ್ರಿ ಸಿದ್ದೇಶ್ವರ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 5:26 IST
Last Updated 3 ಏಪ್ರಿಲ್ 2024, 5:26 IST
ದಾವಣಗೆರೆಯ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತೆರೆದ ವಾಹನದಲ್ಲಿ ಪ್ರಚಾರ ನಡೆಸಿದರು. ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.
ದಾವಣಗೆರೆಯ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತೆರೆದ ವಾಹನದಲ್ಲಿ ಪ್ರಚಾರ ನಡೆಸಿದರು. ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.   

ದಾವಣಗೆರೆ: ‘ಕಾಂಗ್ರೆಸ್ ಸರ್ಕಾರ ಪುಕ್ಕಟೆ ಭರವಸೆ ನೀಡಿ ಅಧಿಕಾರಕ್ಕೆ ಬಂದು ಅಭಿವೃದ್ಧಿ ಎಂಬುದನ್ನೇ ಮರೆತಿದೆ. ಗ್ಯಾರಂಟಿ ಕೊಡುತ್ತೇವೆ ಎಂಬ ನೆಪದಲ್ಲಿ 10 ತಿಂಗಳಿನಿಂದ ನಮ್ಮ ಜಿಲ್ಲೆ ಸೇರಿದಂತೆ ಇಡೀ ರಾಜ್ಯದಲ್ಲೇ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ’ ಎಂದು ಬಿಜೆಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ತಿಳಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆರದ ವಾಹನದಲ್ಲಿ ಮತ್ತು ಕೀ ವೋಟರ್ಸ್ ಮನೆಗಳಿಗೆ ತೆರಳಿ ಪ್ರಚಾರ ನಡೆಸಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಸ್ವಪಕ್ಷೀಯ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಹೇಳುತ್ತಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ನಡೆದುಕೊಂಡು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ಧಾರೆ’ ಎಂದರು.

ಆರಂಭದಲ್ಲಿ ನಗರ ದೇವತೆ ದುಗ್ಗಮ್ಮ ದೇವಿ ಮತ್ತು ವೀರಭದ್ರೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಳೇಪೇಟೆ, ಜಾಲಿನಗರ, ದೇವರಾಜ ಅರಸು ಬಡಾವಣೆಗಳಲ್ಲಿ ಅದ್ದೂರಿ ಪ್ರಚಾರ ನಡೆಸಿದರು.

ADVERTISEMENT

ಧೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್, ಜಿ.ಎಸ್. ಅಶ್ವಿನಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಗ್ಯಮ್ಮ, ಕೊಳೇನಳ್ಳಿ ಎಂ.ಸತೀಶ್, ಸೋಗಿ ಶಾಂತಕುಮಾರ್, ಜಯಮ್ಮ, ಪ್ರೇಮಮ್ಮ ಇದ್ದರು.

ಅಧಿಕಾರವಿದ್ದರೂ ಮತ್ತೆ ಅಧಿಕಾರದ ಜಪ

ಶಾಮನೂರು ಶಿವಶಂಕರಪ್ಪ ಕುಟುಂಬದಲ್ಲಿ ಅಧಿಕಾರವಿದ್ದರೂ ಮತ್ತೆ ಅಧಿಕಾರ ಬೇಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು. ನಗರದ ದುರ್ಗಾಂಬಿಕಾ ದೇವಸ್ಥಾನದ ಬಳಿ ಪ್ರಚಾರ ನಡೆಸಿದ ವೇಳೆ ಸುದ್ದಿಗಾರರ ಜೊತೆ ಅವರು ಮಾತನಾಡಿ ‘ಶಾಮನೂರು ಶಿವಶಂಕರಪ್ಪ ಶಾಸಕರು ಅವರ ಪುತ್ರ ಎಸ್. ಎಸ್. ಮಲ್ಲಿಕಾರ್ಜುನ್ ಜಿಲ್ಲಾ ಉಸ್ತುವಾರಿ ಸಚಿವರು. ಈಗ ಸಚಿವರ ಪತ್ನಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ’ ಎಂದು ಟೀಕಿಸಿದರು.  ‘ಶಾಮನೂರು ಶಿವಶಂಕರಪ್ಪ ದೊಡ್ಡವರು. ನನಗೆ ಚುನಾವಣೆಗಳು ಹೊಸದಲ್ಲ. ಮೂವತ್ತು ವರ್ಷಗಳಿಂದ ಚುನಾವಣೆ ಮಾಡುತ್ತಾ ಬಂದಿದ್ದೇನೆ.‌ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ನರೇಂದ್ರ ಮೋದಿ ‌ಹೆಸರಿನ‌ ಜೊತೆಗೆ 20 ವರ್ಷಗಳಿಂದ ನನ್ನ ಪತಿ‌ ಮಾಡಿರುವ ಅಭಿವೃದ್ಧಿ ನಮ್ಮ ಕೈಹಿಡಿಯುತ್ತವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.