ಜಗಳೂರು: ತಾಲ್ಲೂಕಿನ ಕಣ್ವಕುಪ್ಪೆ ಗವಿ ಮಠದಲ್ಲಿ ಮಕರ ಸಂಕ್ರಾಂತಿಅಂಗವಾಗಿ ಶಾಂತಲಿಂಗೇಶ್ವರ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸೋಮವಾರ ವಿಜೃಂಭಣೆಯಿಂದ ನೆರವೇರಿತು.
ದಾವಣಗೆರೆ, ಚಿತ್ರದುರ್ಗ, ವಿಜನಗರ ಜಿಲ್ಲೆ ಸೇರಿ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ಕಣ್ವಕುಪ್ಪೆ ಗವಿಮಠದ ನಾಲ್ವಡಿ ಶಾಂತಿಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಮಠದ ಆವರಣದಲ್ಲಿ ಭಕ್ತರ ಜಯಘೋಷಗಳೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಿದರು. ಬಾಳೆಹಣ್ಣು, ಹೂ ಮತ್ತು ಪತ್ರೆಯನ್ನು ರಥದ ಕಳಶಕ್ಕೆ ತೂರಿ ಭಕ್ತರು ತಮ್ಮ ಭಕ್ತಿಯನ್ನು ಸಮರ್ಪಿಸಿದರು.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಗುಂಡಮಣಗು ತಿಪ್ಪೇಸ್ವಾಮಿ ಅವರು ರಥದ ಮುಕ್ತಿ ಬಾವುಟವನ್ನು ಬಹಿರಂಗ ಹರಾಜಿನಲ್ಲಿ ₹ 1.01 ಲಕ್ಷಕ್ಕೆ ಪಡೆದುಕೊಂಡರು.
ರಾಜ್ಯಸಭಾ ಸದಸ್ಯ ಹಾಗೂ ಚಲನಚಿತ್ರನಟ ಜಗ್ಗೇಶ್, ಶಾಸಕ ಬಿ.ದೇವೇಂದ್ರಪ್ಪ, ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರ, ಎಚ್.ಪಿ.ರಾಜೇಶ್, ಕೆಪಿಸಿಸಿ ಎಸ್.ಟಿ. ಘಟಕದ ಅಧ್ಯಕ್ಷ ಕೆ.ಪಿ.ಪಾಲಯ್ಯ ರಥೋತ್ಸವದಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.