ದಾವಣಗೆರೆ: ‘ಸ್ಮಾರ್ಟ್ ಸಿಟಿ’ ಯೋಜನೆಯಡಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಲೋಕಾರ್ಪಣೆಗೊಂಡ ಐದು ತಿಂಗಳ ಬಳಿಕ ಸೇವೆಗೆ ಸಜ್ಜಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಜನ್ಮ ದಿನಾಚರಣೆಯ ದಿನವಾದ ಸೆ.22ರಿಂದ ಕಾರ್ಯಾರಂಭಗೊಳ್ಳಲಿದೆ.
ಪಿ.ಬಿ ರಸ್ತೆಯಲ್ಲಿರುವ ಈ ನಿಲ್ದಾಣವನ್ನು ‘ಸ್ಮಾರ್ಟ್ ಸಿಟಿ’ ಯೋಜನೆಯಡಿ ₹ 109 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. 6 ಎಕರೆ 7 ಗುಂಟೆ ಪ್ರದೇಶದಲ್ಲಿರುವ ನಿಲ್ದಾಣ, 45 ಬಸ್ ನಿಲುಗಡೆ ಮಾಡುವ ವ್ಯವಸ್ಥೆಯನ್ನು ಹೊಂದಿದೆ. ಇದು ಮಾರ್ಚ್ 9ರಂದು ಲೋಕಾರ್ಪಣೆಗೊಂಡರೂ ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿರಲಿಲ್ಲ.
2021ರ ಜನವರಿಯಿಂದ ಬಸ್ ನಿಲ್ದಾಣದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಕಾಮಗಾರಿಯನ್ನು ಪೂರ್ಣಗೊಳಿಸಲು ಎರಡು ವರ್ಷಗಳ ಕಾಲಮಿತಿ ನಿಗದಿಪಡಿಸಲಾಗಿತ್ತು. ನಿಲ್ದಾಣ ನಿರ್ಮಾಣವಾಗಿ ಸೇವೆಗೆ ಲಭ್ಯವಾಗಲು ಮೂರೂವರೆ ವರ್ಷ ತೆಗೆದುಕೊಂಡಿದೆ. ಹೈಸ್ಕೂಲ್ ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಾಣಗೊಂಡಿದ್ದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ವಾರದಲ್ಲಿ ಸೇವೆ ಸ್ಥಗಿತಗೊಳಿಸಲಿದೆ.
‘ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ವಿಳಂಬವಾಗಿದ್ದರಿಂದ ಬಸ್ ನಿಲ್ದಾಣ ಸೇವೆಗೆ ಲಭ್ಯವಾಗಿರಲಿಲ್ಲ. ಉಳಿದಂತೆ ಎಲ್ಲ ಸೌಲಭ್ಯಗಳನ್ನು ಬಸ್ ನಿಲ್ದಾಣ ಹೊಂದಿದೆ. ವಾಹನ ನಿಲುಗಡೆಗೂ ಹೊಸ ಟೆಂಡರ್ ಅಂತಿಮಗೊಂಡಿದೆ. ಸೆ.22ರಿಂದ ಕಾರ್ಯಾರಂಭಗೊಳ್ಳಲಿದೆ’ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್.ಹೆಬ್ಬಾಳ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.