ಜಗಳೂರು: ಡೆಂಗಿ ಜ್ವರ ವ್ಯಾಪಕವಾಗಿ ಹರಡುತ್ತಿರುವ ಕಾರಣ ಪಟ್ಟಣ ಪಂಚಾಯಿತಿ ಮತ್ತು ಆರೋಗ್ಯ ಇಲಾಖೆ ವತಿಯಿಂದ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಶುಕ್ರವಾರ ಮನೆಮನೆಗೆ ತೆರಳಿ ಸೊಳ್ಳೆ ಲಾರ್ವಾ ಸಮೀಕ್ಷೆ ನಡೆಸಲಾಯಿತು.
ಪಟ್ಟಣದ ವಿದ್ಯಾರ್ಥಿನಿಯೊಬ್ಬರು ಬಳ್ಳಾರಿಗೆ ತೆರಳಿದ್ದಾಗ ಡೆಂಗಿಗೆ ಬಲಿಯಾಗಿದ್ದರು. ಘಟನೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅಧಿಕಾರಿಗಳು ಪಟ್ಟಣದ ಹೊರಕೆರೆಯ ದೊಡ್ಡ ಮಾರಮ್ಮನ ದೇವಸ್ಥಾನದ ಆಸುಸುಪಾಸು ಮತ್ತು ಭುವನೇಶ್ವರಿ ವೃತ್ತದ ಬಳಿ ಮನೆ ಮನೆಗೆ ತೆರಳಿ ಲಾರ್ವ ಸಮೀಕ್ಷೆ ನಡೆಸಿದರು.
ನಾಗರಿಕರು ತಮ್ಮ ಮನೆಗಳ ಸುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಎಲ್ಲಯೂ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಬಳಸಿ ಎಸೆದ ಎಳನೀರು ಚಿಪ್ಪು, ಹಳೆಯ ಟೈಯರ್, ಪ್ಲಾಸ್ಟಿಕ್ ತ್ಯಾಜ್ಯ ಮುಂತಾದ ವಸ್ತುಗಳನ್ನು ವಿಲೇವಾರಿ ಮಾಡಬೇಕು ಎಂದು ತಾಲ್ಲೂಕು ಆರೋಗ್ಯಧಿಕಾರಿ ಡಾ.ವಿಶ್ವನಾಥ್ ಸಲಹೆ ನೀಡಿದರು.
ಸ್ಚಚ್ಛತೆ ಕಾಪಾಡಿಕೊಳ್ಳದಿದ್ದರೆ ವಿವಿಧ ಸಾಂಕ್ರಾಮಿಕ ರೋಗಗಳು ಬರುತ್ತವೆ. ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕರು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಮನೆ ಮುಂದೆಚಾವಣಿ ಹಾಗೂ ಮನೆಯ ಪಕ್ಕದ ಚರಂಡಿಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾ ನಾಯ್ಕ, ಆರೋಗ್ಯ ನಿರೀಕ್ಷಕ ಪ್ರಶಾಂತ್, ಪಟ್ಟಣ ಪಂಚಾಯಿತಿ ಸದಸ್ಯ ಲುಕ್ಮಾನ್ ಖಾನ , ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಚಿನ್ನಪ್ಪ, ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕರು, ಶುಶ್ರೂಷಕರು, ಆಶಾ ಕಾರ್ಯಕರ್ತೆಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.