ಚನ್ನಗಿರಿ: ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಡಿವೈಎಸ್ಪಿ ರುದ್ರೇಶ್ ಎಸ್. ಉಜ್ಜನಕೊಪ್ಪ ತಿಳಿಸಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ ಪೊಲೀಸ್ ಇಲಾಖೆಯಿಂದ ನಡೆದ ಜನ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸ್ತುತ ಪಟ್ಟಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಸಮರ್ಪಕವಾಗಿ ಇಲ್ಲ. ಮುಂದಿನ ದಿನಗಳಲ್ಲಿ ಪುರಸಭೆ ಸಹಕಾರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಅಂಗಡಿಗಳು ಹಾಗೂ ವ್ಯಾಪಾರ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು. ವಾಹನಗಳ ಸವಾರರು ಸಂಚಾರ ನಿಯಮ ಪಾಲಿಸಿದರೆ ಅಪಘಾತಗಳನ್ನು ತಡೆಯಬಹುದಾಗಿದೆ ಎಂದು ಹೇಳಿದರು.
ಪಟ್ಟಣದಲ್ಲಾಗಲೀ ಅಥವಾ ಯಾವುದೇ ಗ್ರಾಮಗಳಲ್ಲಾಗಲೀ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ಕಂಡು ಬಂದರೆ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರೆ ಅಕ್ರಮ ಚಟುವಟಿಕೆ ನಿಯಂತ್ರಿಸಲು ಸಾಧ್ಯವಾಗುತ್ತದೆ. ಎಲ್ಲರೂ ಕಾನೂನನ್ನು ಗೌರವಿಸಬೇಕು. ಜತೆಗೆ ಕಾನೂನುಗಳ ಬಗ್ಗೆ ಅರಿವನ್ನು ಹೊಂದಬೇಕು. ಚಿಕ್ಕ ವಯಸ್ಸಿನ ಮಕ್ಕಳಿಗೆ ವಾಹನಗಳ ಚಾಲನೆಗೆ ಅವಕಾಶ ನೀಡಬಾರದು ಎಂದು ಅವರು ಸಲಹೆ ನೀಡಿದರು.
ಸಿಪಿಐ ಸಂತೋಷ್ ಕುಮಾರ್, ಪುರಸಭೆ ಸದಸ್ಯ ಶ್ರೀಕಾಂತ್ ಚವ್ಹಾಣ್, ಕದೀರ್ ಬೇಗ್, ಸಿ. ಶ್ರೀನಿವಾಸ್, ಪಿಎಸ್ಐ ಸೈಫುದ್ದೀನ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.