ದಾವಣಗೆರೆ: ವಿದ್ಯಾರ್ಥಿಗಳು ಮೊಬೈಲ್ ಫೋನ್ ಗೀಳಿಗೆ ಬಲಿಯಾಗದೇ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಎನ್ಎಸ್ಎಸ್ನಂತಹ ಸೇವಾ ಚಟುವಟಿಕೆಗಳು ವಿದ್ಯಾರ್ಥಿಗಳ ಬದುಕನ್ನು ವಿಕಸನಗೊಳಿಸುತ್ತವೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಎಂ.ಬಿ.ದಳಪತಿ ಅಭಿಪ್ರಾಯಪಟ್ಟರು.
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಎನ್ಎಸ್ಎಸ್ ಯುವಜನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಯುವಜನೋತ್ಸವವು ರಾಜ್ಯದ ಬೇರೆ ಬೇರೆ ಪ್ರದೇಶದ ಸಾಂಸ್ಕೃತಿಕ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಪರಿಚಯ ಮಾಡಿಕೊಡುತ್ತದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಸಹಕಾರಿಯಾಗಿದೆ’ ಎಂದು ಹೇಳಿದರು.
‘ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭೆಯನ್ನು ಪ್ರದರ್ಶಿಸಬೇಕು. ಈ ಮೂಲಕ ಉತ್ತಮ ಅವಕಾಶಗಳನ್ನು ಪಡೆಯಬೇಕು. ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಮಯಪಾಲನೆ, ಶಿಸ್ತು, ಕರ್ತವ್ಯ ನಿಷ್ಠೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ನೆರವಾಗುತ್ತದೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಜೊತೆಗೆ ಸ್ನೇಹ, ವಿಶ್ವಾಸಾರ್ಹತೆ ಮತ್ತು ಬಾಂಧವ್ಯವನ್ನು ಬೆಸೆಯಲು ಯುವಜನೋತ್ಸವ ಉತ್ತಮ ವೇದಿಕೆ’ ಎಂದು ಹೇಳಿದರು.
ಯುವಜನೋತ್ಸವ ಸಂಯೋಜನಾಧಿಕಾರಿ ಅಶೋಕಕುಮಾರ ವೀ.ಪಾಳೇದ, ‘ವಿದ್ಯಾರ್ಥಿಗಳ ನಡುವೆ ಸೌಹಾರ್ದಯುತ ಸಂಬಂಧ ಬೆಸೆಯುವುದು ಎನ್ಎಸ್ಎಸ್ ಮುಖ್ಯ ಉದ್ದೇಶ. ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಇದು ಪರಿಚಯಿಸುತ್ತದೆ‘ ಎಂದು ಹೇಳಿದರು.
ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ.ಪಿ.ಅಣ್ಣೇಶ, ಜಿ.ಮಂಜುನಾಥ, ತಿಪ್ಪೇಸ್ವಾಮಿ, ಲೋಕೇಶ ನಾಯಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.