ದಾವಣಗೆರೆ: ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆಯನ್ನು ನಡೆಸಲು ವಿವಿಧ ಮತಗಟ್ಟೆಗಳಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಊಟೋಪಾಚಾರಕ್ಕೆ ಮತಗಟ್ಟೆಯೊಂದಕ್ಕೆ ನಿಗದಿಪಡಿಸಿದ್ದ ವೆಚ್ಚವನ್ನು ₹ 600ರಿಂದ ₹ 750ಕ್ಕೆ ಹೆಚ್ಚಿಸಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಆದೇಶ ಹೊರಡಿಸಿದ್ದಾರೆ.
ತರಕಾರಿ ಹಾಗೂ ದಿನಸಿ ಬೆಲೆ ದುಬಾರಿಯಾಗಿದ್ದು, ₹ 600ರಲ್ಲಿ ಸೂಚಿತ ಪಟ್ಟಿ ಪ್ರಕಾರ ಮತಗಟ್ಟೆ ಸಿಬ್ಬಂದಿಗೆ ಊಟೋಪಚಾರ ನೀಡುವುದು ಕಷ್ಟಸಾಧ್ಯ ಎಂದು ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ‘ಪ್ರಜಾವಾಣಿ’ಯೊಂದಿಗೆ ಅಳಲು ತೋಡಿಕೊಂಡಿದ್ದರು.
ಮತಗಟ್ಟೆ ಸಿಬ್ಬಂದಿಗೆ ಊಟೋಪಚಾರದ ವೆಚ್ಚವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಜಿಲ್ಲಾ ಚುನಾವಣಾ ಅಧಿಕಾರಿ ಅವರನ್ನು ಆಗ್ರಹಿಸಿದ್ದರು.
ಈ ಕುರಿತು ‘ಪ್ರಜಾವಾಣಿ’ಯಲ್ಲಿ ಸೋಮವಾರ ವಿಶೇಷ ವರದಿ ಪ್ರಕಟವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.