ಜಗಳೂರು: ಸಮಾಜದ ಶೋಷಿತರು ಮತ್ತು ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಎನ್. ಜಯದೇವ ನಾಯ್ಕ ಹೇಳಿದರು.
ಪಟ್ಟಣದ ಜೆಎಂಎಫ್ಸಿ ಮತ್ತು ಸಿವಿಲ್ ನ್ಯಾಯಾಲಯದ ಸಭಾಂಗಣದಲ್ಲಿ ತಾಲ್ಲೂಕು ವಕೀಲರ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ರಾಜಕೀಯ ಕ್ಷೇತ್ರದಲ್ಲಿ ಹಲವು ಏಳು ಬೀಳು ಕಂಡಿದ್ದೇನೆ. ಪ್ರಾಮಾಣಿಕತೆ ಮತ್ತು ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಹೊಸ ಜವಾಬ್ದಾರಿ ನೀಡಲಾಗಿದೆ. ಎಲ್ಲರ ನಿರೀಕ್ಷೆಯಂತೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಎಂದು ಹೇಳಿದರು.
‘ಅತ್ಯಂತ ಹಿಂದುಳಿದ ತಾಲ್ಲೂಕಿನಲ್ಲಿ ವಕೀಲರಾಗಿ ತಮ್ಮ ಪ್ರತಿಭೆ, ಶ್ರಮದಿಂದ ಸಮಾಜದ ವಿವಿಧ ಸ್ತರಗಳಲ್ಲಿ ಎತ್ತರಕ್ಕೆ ಬೆಳೆದುನಿಂತ ಜಯದೇವನಾಯ್ಕ ಅವರನ್ನು ರಾಜ್ಯ ಸರ್ಕಾರ ಗುರುತಿಸಿ ಸೂಕ್ತ ಸ್ಥಾನಮಾನ ನೀಡಿರುವುದು ಶ್ಲಾಘನೀಯ. ಸಂವಿಧಾನದಡಿ ಕಾರ್ಯನಿರ್ವಹಿಸುವ ವಕೀಲ ಸಮುದಾಯದವರಿಗೆ ಸರ್ಕಾರದ ಮಹತ್ವದ ಹುದ್ದೆಗಳು ಲಭಿಸಿದಾಗ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ವಕೀಲ ವೃತ್ತಿ ಮತ್ತು ರಾಜಕೀಯ ಕ್ಷೇತ್ರಕ್ಕೆ ಅವಿನಾಭಾವ ಸಂಬಂಧವಿದೆ. ನಾನೂ ಸಹ ತಾಲ್ಲೂಕು ಪಂಚಾಯಿತಿ ಸದಸ್ಯನಾಗಿ ಸೇವೆ ಸಲ್ಲಿಸಿ ಜನರ ಕಷ್ಟಸುಖಗಳಿಗೆ ಸ್ಪಂದಿಸಿದ ಸಾರ್ಥಕತೆ ಹೊಂದಿದ್ದೇನೆ’ ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರೇನಹಳ್ಳಿ ಟಿ.ಬಸವರಾಜ್ ತಿಳಿಸಿದರು.
ಸರ್ಕಾರಿ ಸಹಾಯಕ ವಕೀಲ ಮಂಜುನಾಥ್, ಹಿರಿಯ ವಕೀಲರಾದ ಕೆ.ಎನ್. ಪರಮೇಶ್ವರಪ್ಪ, ಕೆ.ಎಂ.ಬಸವರಾಜಪ್ಪ , ಎಂ.ಟಿ. ತಿಪ್ಪೇಸ್ವಾಮಿ, ವಕೀಲರ ಸಂಘದ ಕಾರ್ಯದರ್ಶಿ ಎ.ಕೆ.ಪರಶುರಾಮಪ್ಪ, ಉಪಾಧ್ಯಕ್ಷ ಜಿ.ಎಸ್. ಪ್ರಕಾಶ್, ವಕೀಲರಾದ ಎಚ್. ಬಸವರಾಜಪ್ಪ, ಇ. ಓಂಕಾರೇಶ್ವರ, ಡಿ.ವಿ.ನಾಗಪ್ಪ, ಕೆ.ವಿ. ರುದ್ರೇಶ್, ಪಟೇಲ್, ಲಕ್ಷ್ಮಣ್, ಆರ್.ಓಬಳೇಶ್, ಸುನಿಲ್, ನಾಗೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.