ದಾವಣಗೆರೆ: ಪ್ರಯೋಗಾಲಯಗಳಲ್ಲಿ ಕಾರ್ಯನಿರ್ವಹಿಸುವ ವಿಜ್ಞಾನಿಗಳು ಮತ್ತು ಸಂಶೋಧನಾರ್ಥಿಗಳಿಗೆ ಸಾಮಾಜಿಕ ಪ್ರಜ್ಞೆ ಮತ್ತು ಸಮಾಜದ ಅಗತ್ಯತೆಯ ಕುರಿತು ತಿಳಿವಳಿಕೆ ಇರಬೇಕು. ವಿಷಯ ಆಧಾರಿತ ಮೂಲಭೂತ ಜ್ಞಾನ ಮತ್ತು ವಿಭಿನ್ನ ಆಲೋಚನೆಗಳಿಂದ ಹೊಸ ಆವಿಷ್ಕಾರಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಜಿ. ಮೂಲಿಮನಿ ಹೇಳಿದರು.
ದಾವಣಗೆರೆ ವಿಶ್ವವಿದ್ಯಾಲಯದ ಎಂ.ಬಿ.ಎ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಶ್ರೇಷ್ಠ ವಿಜ್ಞಾನಿಗಳು ಜಗತ್ತಿನಲ್ಲಿ ನಡೆಯುತ್ತಿರುವ ಘಟನೆಗಳನ್ನು ವಿಭಿನ್ನ ಆಯಾಮ ಮತ್ತು ದೃಷ್ಟಿಕೋನದಿಂದ ನೋಡಿ ಗ್ರಹಿಸುವ ಮೂಲಕ ಹೊಸ ಸಿದ್ದಾಂತಗಳನ್ನು ಮತ್ತು ಆವಿಷ್ಕಾರಗಳನ್ನು ಬೆಳಕಿಗೆ ತಂದಿದ್ದಾರೆ. ವಿಜ್ಞಾನದ ವಿದ್ಯಾರ್ಥಿಗಳು ಅಪ್ಪ ಹಾಕಿದ ಆಲದ ಮರಕ್ಕೆ ಜೋತು ಬೀಳದೆ ನಿಮ್ಮ ಸ್ವಂತ ಬುದ್ಧಿಶಕ್ತಿ, ಕ್ರಿಯಾಶೀಲತೆ ಮತ್ತು ವೈಜ್ಞಾನಿಕ ಕಲಿಕೆಯಿಂದ ಹೊಸ ಆವಿಷ್ಕಾರಗಳನ್ನು ಬೆಳಕಿಗೆ ತರಲು ಸಾಧ್ಯವಾಗುತ್ತದೆ’ ಎಂದರು.
ಅಧ್ಯಕ್ಷತೆ ವಹಿಸಿದ್ದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಡಿ. ಕುಂಬಾರ ಮಾತನಾಡಿ, ‘ವಿದ್ಯಾರ್ಥಿಗಳು ಸುತ್ತಮುತ್ತ ನಡೆಯುತ್ತಿರುವ ಘಟನೆಗಳನ್ನು ತೆರೆದ ಕಣ್ಣಿನಿಂದ ನೋಡುವುದರಿಂದ ಸಾಮಾಜಿಕ ವೈಪರಿತ್ಯ ಮತ್ತು ಅಗತ್ಯಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಮಾಜಿಕ ಜ್ಞಾನ ಮತ್ತು ವೈಜ್ಞಾನಿಕ ಬೆಳವಣಿಗೆಗಳ ಅರಿವು ಪ್ರಮುಖ ಪಾತ್ರ ವಹಿಸುತ್ತದೆ’ ಎಂದರು.
ಕಾರ್ಯಕ್ರಮದಲ್ಲಿ ವಿಜ್ಞಾನ ನಿಕಾಯದ ಡೀನ್ ಪ್ರೊ. ಯು.ಬಿ. ಮಹಾಬಲೇಶ್ವರ, ವಿಶ್ವವಿದ್ಯಾನಿಲಯದ ಯೋಜನಾ ನಿರ್ವಹಣಾ ಮತ್ತು ಮೌಲ್ಯಮಾಪನ ಮಂಡಳಿ ನಿರ್ದೇಶಕ ಪ್ರೊ. ಪ್ರಕಾಶ್ ಡಿ.ಜಿ. ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.