ADVERTISEMENT

ಕಲ್ಲು ತೂರಾಟ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2024, 5:48 IST
Last Updated 1 ಜೂನ್ 2024, 5:48 IST
ಚನ್ನಗಿರಿ ಪಟ್ಟಣದಲ್ಲಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣವನ್ನು ಖಂಡಿಸಿ ಶುಕ್ರವಾರ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು
ಚನ್ನಗಿರಿ ಪಟ್ಟಣದಲ್ಲಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣವನ್ನು ಖಂಡಿಸಿ ಶುಕ್ರವಾರ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು   

ಚನ್ನಗಿರಿ: ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣವನ್ನು ಖಂಡಿಸಿ ಶುಕ್ರವಾರ ಪಟ್ಟಣದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. 

‘ಮೇ 24ರ ತಡರಾತ್ರಿ ಆದಿಲ್ ಸಾವಿನ ಹಿನ್ನೆಲೆಯಲ್ಲಿ ಪಟ್ಟಣದ ಒಂದು ಕೋಮಿಗೆ ಸೇರಿದ ನೂರಾರು ಜನರ ಗುಂಪು ಏಕಾಏಕಿ ಪೊಲೀಸ್ ಠಾಣೆಗೆ ನುಗ್ಗಿ, ಠಾಣೆಯ ಕಿಟಕಿ ಗಾಜು ಹಾಗೂ ಪೀಠೋಪಕರಣಗಳಿಗೆ ಹಾನಿ ಮಾಡಿದ್ದಾರೆ. ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿ, ಸಾರ್ವಜನಿಕರ ಶಾಂತಿಗೆ ಭಂಗ ತಂದಿದ್ದಾರೆ. ಈ ಘಟನೆಯಲ್ಲಿ ಭಾಗಿಯಾದ ಕಿಡಿಗೇಡಿಗಳನ್ನು ಬಂಧಿಸಬೇಕು’ ಎಂದು ಬಿಜೆಪಿ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಒತ್ತಾಯಿಸಿದರು. 

‘ಈ ಘಟನೆ ನಡೆದಾಗ ಕೆಲವು ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಹಾಕಿರುವ ಬಗ್ಗೆ ಆಡಿಯೊ, ವಿಡಿಯೊಗಳು ಹರಿದಾಡಿವೆ. ಒಂದು ವರ್ಷದಿಂದ ಈ ತಾಲ್ಲೂಕಿನಲ್ಲಿ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಜತೆಗೆ ತಾಲ್ಲೂಕಿನಲ್ಲಿ ಎಲ್ಲಿ ಹೋದರೂ ಮಟ್ಕಾ, ಗಾಂಜಾ ಹಾಗೂ ಇತರೆ ಜೂಜಾಟಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಈ ಚಟಗಳಿಗೆ ಅಮಾಯಕ ಯುವಕರು ಬಲಿಯಾಗುತ್ತಿದ್ದಾರೆ. ಇದಕ್ಕೆ ಮೊದಲು ಕಡಿವಾಣ ಹಾಕಬೇಕು. ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಆ ಆದೇಶವನ್ನು ಕೂಡಲೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು. 

ADVERTISEMENT

ಪಟ್ಟಣದ ಕೆರೆ ಏರಿ ಚೌಡೇಶ್ವರಿ ದೇವಿ ದೇವಸ್ಥಾನದಿಂದ ಹೊರಟ ಪ್ರತಿಭಟನಾ ಮೆರವಣಿಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಪಿ.ಎಸ್. ಎರ್ರಿಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು. 

ಬಿಜೆಪಿ ಮುಖಂಡರಾದ ಎಚ್.ವಿ. ಮಲ್ಲಿಕಾರ್ಜುನ್, ಟಿ. ನಾಗರಾಜ್, ಸಂಗಮೇಶ್, ಪಿ.ಎಸ್. ಸಿದ್ದೇಶ್, ಉಮೇಶ್ ಕುಮಾರ್, ಷಣ್ಮುಖ, ಕುಬೇಂದ್ರೋಜಿರಾವ್, ಪರಮೇಶ್ ಪಾರಿ, ಚಿಕ್ಕಣ್ಣ, ಕಮಲಾ ಹರೀಶ್, ಸವಿತಾ ರಾಘವೇಂದ್ರ, ನಂಜುಂಡಪ್ಪ, ಕೆ.ಆರ್. ಮಾಲತೇಶ್, ಮಂಜುನಾಥ್ ಉಪಸ್ಥಿತರಿದ್ದರು.

ಚನ್ನಗಿರಿ ಪಟ್ಟಣದಲ್ಲಿ ಬಿಜೆಪಿ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.