ADVERTISEMENT

ಹುಬ್ಬಳ್ಳಿ | ಬಿಜೆಪಿ ಪ್ರತಿಭಟನೆ: ಪೊಲೀಸ್ ಬಿಗಿ ಬಂದೋಬಸ್ತ್

​ಪ್ರಜಾವಾಣಿ ವಾರ್ತೆ
Published 3 ಜನವರಿ 2024, 5:40 IST
Last Updated 3 ಜನವರಿ 2024, 5:40 IST
   

ಹುಬ್ಬಳ್ಳಿ: ಹಿಂದೂ ಕಾರ್ಯಕರ್ತರ ವಿರುದ್ಧ ನಕಲಿ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ ಎಂದು ಆರೋಪಿಸಿ ನಗರದ ದುರ್ಗದ ಬೈಲ್‌ನಲ್ಲಿರುವ ಶಹರ ಪೊಲೀಸ್ ಠಾಣೆ ಎದುರು ಬುಧವಾರ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಸದಾ ಜನರಿಂದ ಗಿಜಿಗುಡುತ್ತಿದ್ದ ದುರ್ಗದಬೈಲ್‌ನಲ್ಲಿ ಜನಸಂಚಾರ ಕಡಿಮೆಯಾಗಿದೆ. ಸುತ್ತಲಿನ ಅಂಗಡಿಗಳು ಸ್ವಯಂಪ್ರೇರಿತವಾಗಿ ಬಂದ್ ಆಗಿವೆ.

ಠಾಣೆ ಸಂಪರ್ಕಿಸುವ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ADVERTISEMENT

ಠಾಣೆ ಎದುರಿನ ಸರ್ಕಾರಿ ಮಾದರಿ ಗಂಡು ಮಕ್ಕಳ ಶಾಲೆ ನಂ.2ರಲ್ಲಿ ಎಂದಿನಂತೆ ಶೈಕ್ಷಣಿಕ ಚಟುವಟಿಕೆಗಳು ನಡೆದಿವೆ.

ಕಮಿಷನರ್ ಭೇಟಿ: ಬಂದೋಬಸ್ತ್ ಪರಿಶೀಲನೆ

‘ಶಹರ ಠಾಣೆ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಲು ಸದ್ಯದವರೆಗೆ ಯಾವುದೇ ಅನುಮತಿ‌ ಪಡೆದಿಲ್ಲ.ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದೇವೆ’ ಎಂದು ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಹೇಳಿದರು.

ಠಾಣೆಗೆ ಭೇಟಿ ನೀಡಿ, ಬಂದೋಬಸ್ತ್ ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

‘ಮೆರವಣಿಗೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಬಂಧಿತ ಶ್ರೀಕಾಂತ್ ವಿರುದ್ಧ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿವೆ’ ಎಂದರು.

‘ಶಹರ ಠಾಣೆ ಪೊಲೀಸ್ ಇನ್ಸಪೆಕ್ಟರ್ ಅಮಾನತು ಬೇಡಿಕೆ ಬಗ್ಗೆಯೂ ಯಾವುದೇ ಮಾಹಿತಿ ‌ಇಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.