ನವಲಗುಂದ: ‘ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಅವಶ್ಯ ಸಂಪನ್ಮೂಲಗಳನ್ನು ಬಳಸಿ ಶೇ 100ರಷ್ಟು ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಸನ್ನದ್ಧರಾಗಬೇಕು’ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಕರೆ ನೀಡಿದರು.
ಪಟ್ಟಣದ ಶಿಕ್ಷಕರ ಸಹಕಾರ ಕಲ್ಯಾಣ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ನವಲಗುಂದ ಹಾಗೂ ಅಣ್ಣಿಗೇರಿ ತಾಲ್ಲೂಕುಗಳ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರಧಾನ ಗುರುಗಳ ಸಭೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರತಿಯೊಬ್ಬ ಶಿಕ್ಷಕರು ಕಂಕಣಬದ್ಧರಾಗಿ ಶ್ರಮಿಸಬೇಕು’ ಎಂದರು.
‘ನವಲಗುಂದ ಪಟ್ಟಣದಲ್ಲಿ ನಿರ್ಮಿಸಲಾಗುತ್ತಿರುವ ಗುರುಭವನ ಕಟ್ಟಡಕ್ಕೆ ಅಗತ್ಯ ಸಹಕಾರ ನೀಡಲು ಬದ್ಧನಿದ್ದು, ಶಿಕ್ಷಕ ಸಂಘಟನೆಗಳು ಈ ಕುರಿತಾಗಿ ಸಿದ್ಧತೆ ಮಾಡಿಕೊಳ್ಳಿ’ ಎಂದರು.
ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ‘ಧಾರವಾಡ ಜಿಲ್ಲೆ ಶಿಕ್ಷಣ ಕಾಶಿ ಎಂಬ ಬಿರುದು ಪಡೆದಿದ್ದು, ಶಿಕ್ಷಕರು ಮಕ್ಕಳನ್ನು ಶೈಕ್ಷಣಿಕ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸಕುಕ’ ಎಂದರು.
2022–23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಬಸವರಡ್ಡಿ ಚಾಕಲಬ್ಬಿ, ಮಂಜುಳಾ ಖನ್ನೂರ ಹಾಗೂ ಆಶಾ ಪಾಟೀಲ್ ಅವರಿಗೆ ಕರ್ನಾಟಕ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಪ್ರೋತ್ಸಾಹದಾಯಕವಾಗಿ ನೀಡಿದ ಲ್ಯಾಪ್ ಟಾಪ್ಗಳನ್ನು ವಿತರಿಸಲಾಯಿತು.
ಕ್ಷೇತ್ರ ಶೀಕ್ಷಣಾಧಿಕಾರಿ ಎಸ್.ಬಿ.ಮಲ್ಲಾಡದ, ಪುರಸಭೆ ಮಾಜಿ ಅಧ್ಯಕ್ಷ ಮೋದಿನಸಾಬ ಶಿರೂರ, ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಇದ್ದರು. ಶ್ರೀನಿವಾಸ ಅಮಾತ್ಯನವರ ನಿರೂಪಿಸಿದರು. ವೆಂಕಟೇಶ ಭಜಂತ್ರಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.