ಧಾರವಾಡ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ ದರ ಹೆಚ್ಚಿಸಿರುವುದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಸಂಘಟನೆಯ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಭವಾನಿ ಶಂಕರ್ ಮಾತನಾಡಿ, ‘ಸರ್ಕಾರಗಳು ಎಲ್ಲ ಸೇವೆಗಳನ್ನು ಡಿಜಿಟಲೀಕರಣ ಮಾಡಿವೆ. ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಅಂತರ್ಜಾಲದ ಮೇಲೆ ಅವಲಂಬಿತರಾಗಿದ್ದಾರೆ. ಇಂದು ಇಂಟರ್ನೆಟ್ ಮೊಬೈಲ್ ಡೇಟಾ ಮತ್ತು ರೀಚಾರ್ಜ್ ಜನರ ಜೀವನದ ಅನಿವಾರ್ಯ ಭಾಗವಾಗಿದೆ. ಆದ್ದರಿಂದ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ದರ ಕಡಿಮೆ ಮಾಡಬೇಕು’ ಎಂದು ಆಗ್ರಹಿಸಿದರು.
‘ಕೇಂದ್ರ ಸರ್ಕಾರವು ಬಿಎಸ್ಎನ್ಎಲ್ ಟೆಲಿಕಾಂ ಕಂಪನಿಯನ್ನು ಪುನರುಜ್ಜೀವನಗೊಳಿಸಲು ಮತ್ತು ಸಂವಹನ ಸೇವೆಗಳು ಕೈಗೆಟುಕುವ ದರದಲ್ಲಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಕಚೇರಿ ಮೂಲಕ ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯ ಸಚಿವರಿಗೆ ಮನವಿ ಸಲ್ಲಿಸಿದರು. ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ರಣಜಿತ್ ದೂಪದ್, ಪ್ರೀತಿ ಸಿಂಗಾಡೆ, ಶರಣು ಪಾಟೀಲ, ಶಿವಕುಮಾರ ಸೂರ್ಯವಂಶಿ, ಲಕ್ಷ್ಮಿ ಕನಕೂರ್, ಸಲೀಂ, ಗಿರೀಶ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.