ಹುಬ್ಬಳ್ಳಿ: ‘ರಾಜ್ಯದಲ್ಲಿ ಗಾಂಜಾ ಮಾರಾಟ, ಸೇವನೆ ಹಾಗೂ ಡ್ರಗ್ಸ್ ಮಾಫಿಯಾ ಚಟುವಟಿಕೆಗಳು ನಡೆಯುತ್ತಿದ್ದು, ಇದನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯವಹಿಸುತ್ತಿದೆ‘ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರು ಸೇರಿದಂತೆ ಹುಬ್ಬಳ್ಳಿ, ಮಂಗಳೂರು ಭಾಗದಲ್ಲಿ ಡ್ರಗ್ಸ್ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿವೆ. ಇಂತಹ ಚಟುವಟಿಕೆಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ತ್ವರಿತ ಮತ್ತು ಕಠಿಣ ಕ್ರಮಕೈಗೊಳ್ಳದೇ ಇದ್ದರೆ, ಈ ವಿಷಯದಲ್ಲಿ ಕರ್ನಾಟಕವು ಪಂಜಾಬ್ ರಾಜ್ಯವನ್ನು ಮೀರಿಸಲಿದೆ’ ಎಂದು ಎಚ್ಚರಿಸಿದರು.
ಶೀಘ್ರ ಕ್ರಮ: ‘ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯು ಕೇಂದ್ರಕ್ಕೆ ತಡವಾಗಿ ಮಾಹಿತಿ ನೀಡಿದೆ. ಕೇಂದ್ರ ತ್ವರಿತವಾಗಿ ಸ್ಪಂದಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದೆ‘ ಎಂದು ಪ್ರಲ್ಹಾದ ಜೋಶಿ ಹೇಳಿದರು.
ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಗೆ ಹಾಗೂ ವಿದೇಶಾಂಗ ಸಚಿವರಿಗೆ ಪತ್ರ ಬರೆದು ರಾಜಕಾರಣ ಮಾಡಿದರೆ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದಾಗಲ್ಲ. ಇದರಲ್ಲಿ ರಾಜಕಾರಣ ಮಾಡುವುದಕ್ಕಿಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಆಗ್ರಹಿಸಿದರು.
‘ಏಪ್ರಿಲ್ 21, 22ರಂದೇ ರಾಜ್ಯ ಸರ್ಕಾರವು ಕೇಂದ್ರಕ್ಕೆ ಅಧಿಕೃತ ಮಾಹಿತಿ ಕೊಟ್ಟಿದ್ದರೆ, ಅಂದೇ ಎಲ್ಲಾ ವಿಮಾನ ನಿಲ್ದಾಣಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲು ಸಾಧ್ಯವಾಗುತ್ತಿತ್ತು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.