ADVERTISEMENT

ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು: ಕಠಿಣ ಶಿಕ್ಷೆಯಾಗಲಿ-ಗುಣಧರನಂದಿ ಮಹಾರಾಜ

ವರೂರಿನ ನವಗ್ರಹತೀರ್ಥ ಕ್ಷೇತ್ರದ ಗುಣಧರನಂದಿ ಮಹಾರಾಜ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2024, 14:28 IST
Last Updated 22 ಸೆಪ್ಟೆಂಬರ್ 2024, 14:28 IST
ಗುಣಧರನಂದಿ ಮಹಾರಾಜರು
ಗುಣಧರನಂದಿ ಮಹಾರಾಜರು   

ಹುಬ್ಬಳ್ಳಿ: ‘ತಿರುಪತಿ ಸರ್ವಧರ್ಮಗಳ ಶಕ್ತಿ ಕೇಂದ್ರ. ಅಲ್ಲಿ ನೀಡುವ ಪ್ರಸಾದವಾದ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಇರುವ ತುಪ್ಪ ಬಳಕೆ ಮಾಡಿರುವುದು ಸರಿಯಲ್ಲ’ ಎಂದು ಹುಬ್ಬಳ್ಳಿ ತಾಲ್ಲೂಕು ವರೂರಿನ ನವಗ್ರಹತೀರ್ಥ ಕ್ಷೇತ್ರದ ಗುಣಧರನಂದಿ ಮಹಾರಾಜರು ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರಾದರೂ ಪ್ರಸಾದದ ಮೂಲಕ ಮಾಂಸಾಹಾರ ಸೇವನೆ ಮಾಡಿಸುವ ದುಷ್ಟ ಪ್ರಯತ್ನ ಮಾಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಅವರನ್ನು ದೇಶದಿಂದ ಗಡಿಪಾರು ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು’ ಎಂದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ  ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಈ ವಯಸ್ಸಿನಲ್ಲಿ ಅವರ ಮೇಲೆ ಆರೋಪ ಮಾಡಿ, ಹೊಲಸು ರಾಜಕಾರಣ ಮಾಡಬಾರದು. ಸಿದ್ದರಾಮಯ್ಯ ಪ್ರಾಮಾಣಿಕವಾಗಿ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದಂತೆ ಅವರಿಗೆ ಮಾಡಬಾರದು’ ಎಂದು ಹೇಳಿದರು.

ADVERTISEMENT

ಕ್ಷಮಾವಳಿ ದಿನ ಘೋಷಿಸಿ: ‘ಜೈನ ಸಮಾಜದಿಂದ ನಡೆಯವ ‘ಕ್ಷಮಾವಳಿ ಪರ್ವ’ ರಾಷ್ಟ್ರೀಯ ಕಾರ್ಯಕ್ರಮ ಆಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ಷಮಾವಳಿ ದಿನ ಆಚರಣೆ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದರು.

ಲಾಡು ವಿವಾದ: ಬಂಧಿಸಿ, ಜೈಲಿಗೆ ಕಳುಹಿಸಿ

ವಿಜಯಪುರ: ‘ತಿರುಪತಿ ಲಡ್ಡು ವಿಷಯದಲ್ಲಿ ವಿದೇಶಿ ಕ್ರಿಶ್ಚಿಯನ್‌ ಮಿಷನರಿಗಳ ಕೈವಾಡ ಇದೆ. ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರವಾಗಿರುವ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರು ಜಗತ್ತಿನ ಹಿಂದುಗಳಿಗೆ ಮಾಡಿರುವ ದೊಡ್ಡ ದ್ರೋಹ ಇದಾಗಿದೆ. ಅವರ ವಿರುದ್ಧ ಎಫ್‌ಐಆರ್‌ ಹಾಕಿ, ಬಂಧಿಸಿ, ಜೈಲಿಗೆ ಕಳುಹಿಸಬೇಕು’ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ  ಆಗ್ರಹಿಸಿದರು.

ಲಾಡುವಿನಲ್ಲಿ ಪ್ರಾಣಿ ಕೊಬ್ಬು ಬೆರಸಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ. ಹಿಂದೂಗಳ ಶ್ರದ್ಧಾಕೇಂದ್ರಕ್ಕೆ ಅಪಮಾನ ಮಾಡಲಾಗಿದೆ. ಸಿಬಿಐ ತನಿಖೆಯಾಗಬೇಕು, ತಪ್ಪಿತಸ್ಥರ ವಿರುದ್ಧ ಕ್ರಮವಾಗಬೇಕು’ ಎಂದರು.

‘ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೂ ಇದೇ ಜಗನ್‌ ಮೋಹನ್‌ ರೆಡ್ಡಿ ಎರಡು ಲಕ್ಷ ಲಡ್ಡು ಕಳುಹಿಸಿದ್ದರು. ಅಲ್ಲಿಯೂ ಭಕ್ತರಿಗೆ ವಿತರಣೆ ಮಾಡಲಾಗಿತ್ತು’ ಎಂದು ಈಶ್ವರಪ್ಪ ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.