ಹುಬ್ಬಳ್ಳಿ: 'ಅಹಿಂದ, ದಲಿತ ಪರ ಎನ್ನುವ ಕಾಂಗ್ರೆಸ್ ಸರ್ಕಾರ ಈಗ ಒಬಿಸಿಯಲ್ಲಿ ದಲಿತರಿಗಿದ್ದ ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ಕೊಡಲು ಹೊರಟಿದೆ' ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಆರೋಪಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಸ್ಲಿಮರ ಓಲೈಕೆಗಾಗಿ ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಅಂಬೇಡ್ಕರ್, ಬಾಬು ಜಗಜೀವನ ರಾಮ್ ಅವರಿಗೆ ಅವಮಾನ ಮಾಡಿದ್ದು, ಅವಕಾಶವಾದಿ ರಾಜಕಾರಣ ಮಾಡುತ್ತಿದೆ ಎಂದು ಹೇಳಿದರು.
ಕರ್ನಾಟಕಕ್ಕೆ ವಸೂಲಿಗೆ ಬರ್ತಾರೆ: ಕಾಂಗ್ರೆಸ್ ನಾಯಕರು ಕರ್ನಾಟಕಕ್ಕೆ ವಸೂಲಿಗೆ ಬರುತ್ತಾರೆ. ಪ್ರಧಾನಿ ಮೋದಿ ಅವರ ಬಗ್ಗೆ, ಬಿಜೆಪಿ ಬಗ್ಗೆ ಮಾತನಾಡುವ ಯೋಗ್ಯತೆ ಇವರಿಗಿಲ್ಲ ಎಂದು ಜೋಶಿ ತಿರುಗೇಟು ನೀಡಿದರು.
ಕರ್ನಾಟಕ, ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಹಿಮಾಚಲ ಪ್ರದೇಶದಲ್ಲಿ ಅವರ ಸರ್ಕಾರ ತೇಲಾಡುತ್ತಿದೆ. ದೇಶದ ಜನ ಕಾಂಗ್ರೆಸ್ಸಿಗರ ಡಬಲ್ ಸ್ಟ್ಯಾಂಡ್ ಅನ್ನು ನೋಡಿ ಬಿಟ್ಟಿದ್ದಾರೆ. ಹಾಗಾಗಿ ಈ ಸ್ಥಿತಿಗೆ ತಂದಿದ್ದಾರೆ ಎಂದು ಲೇವಡಿ ಮಾಡಿದರು.
ದೇಶದಲ್ಲಿ 230 ಕ್ಷೇತ್ರಗಳಿಗೆ ಸ್ಪರ್ಧಿಸಿದ್ದಾರೆ. ಅಧಿಕಾರಕ್ಕೆ ಬರುವಷ್ಟು ಸ್ಥಾನಗಳಿಗೂ ಸ್ಪರ್ಧಿಸದ ಇವರು ಬಿಜೆಪಿ, ಮೋದಿ ಬಗ್ಗೆ ಮಾತಾಡುತ್ತಾರೆ. ಇದು ಅವರ ಹತಾಶೆಯನ್ನು ತೋರಿಸುತ್ತದೆ ಎಂದು ಜೋಶಿ ಹೇಳಿದರು.
ಅವರ ಡಿಎನ್ಎ ಬಗ್ಗೆ ದೇಶದ ಜನಕ್ಕೆ ಗೊತ್ತಿದೆ ಎಂದು ಕಾಂಗ್ರೆಸ್ಗೆ ತಿರುಗೇಟು ನೀಡಿದ ಜೋಶಿ, ಪ್ರಧಾನಿ ನರೇಂದ್ರ ಮೋದಿ ದೇಶ ಪರಿವರ್ತನೆಯ ನಾಯಕ ಎಂಬುದನ್ನು ಜನ ನಂಬಿದ್ದಾರೆ ಎಂದು ಹೇಳಿದರು.
ದೇಶದಲ್ಲಿನ ಎಲ್ಲ ಸರ್ವೆಗಳಲ್ಲಿ ಬಿಜೆಪಿ 370, 380 ಗೆಲ್ಲುತ್ತದೆ ಎಂಬ ವರದಿ ಇದೆ. ಆದರೆ, ನಾವು 400 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.