ADVERTISEMENT

ನೇಹಾ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಿ: ಜೆ.ಪಿ. ನಡ್ಡಾ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2024, 14:26 IST
Last Updated 21 ಏಪ್ರಿಲ್ 2024, 14:26 IST

ಹುಬ್ಬಳ್ಳಿ: ‘ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ ಅವರ ಹೇಳಿಕೆಗಳು ತನಿಖೆಯನ್ನು ದುರ್ಬಲಗೊಳಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ಒಪ್ಪಿಸಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗ್ರಹಿಸಿದರು.

ಭಾನುವಾರ ಬಿಡ್ನಾಳದಲ್ಲಿರುವ ಮೃತೆ ನೇಹಾ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

‘ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಪ್ರಕರಣವನ್ನು ದಾರಿ ತಪ್ಪಿಸುವ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ. ಅವರು ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದು, ರಾಜ್ಯದ ಜನತೆ ಎಂದಿಗೂ ಕ್ಷಮಿಸುವುದಿಲ್ಲ. ನೇಹಾ ಸಾವಿಗೆ ನ್ಯಾಯ ದೊರಕುತ್ತದೆ ಎಂದು ರಾಜ್ಯದ ಜನತೆ ನಿರೀಕ್ಷಿಸುತ್ತಿದ್ದಾರೆ. ರಾಜ್ಯದ ಪೊಲೀಸರು ತನಿಖೆ ನಡೆಸಲು ಅಸಮರ್ಥರಾದರೆ, ಕೂಡಲೇ ಸಿಬಿಐಗೆ ಹಸ್ತಾಂತರಿಸಬೇಕು’ ಎಂದರು.

ADVERTISEMENT

‘ನೇಹಾ ಕುಟುಂಬಕ್ಕೆ ನ್ಯಾಯ ದೊರೆಯಬೇಕು. ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಪಾಲಕರು ಸಹ ಮನವಿ ಮಾಡಿದ್ದಾರೆ. ಅವರ ದುಃಖದಲ್ಲಿ ನಾವು ಸಹ ಭಾಗಿಯಾಗಿದ್ದು, ನ್ಯಾಯ ದೊರೆಯುವವರೆಗೂ ಬಿಜೆಪಿ ಅವರ ಜೊತೆ ಇರಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.