ಧಾರವಾಡ: ರಾಜ್ಯ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ. ಸರ್ಕಾರ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಮಾಜಿ ಸಚಿವ ಹನುಮಂತಪ್ಪ ಅಲ್ಕೋಡ್ ಒತ್ತಾಯಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆಯಿಂದ ಜನರಿಗೆ ತೊಂದರೆಯಾಗಿದೆ. ದುಡಿಮೆಗೆ ಜನರು ಗುಳೆ ಹೋಗುವಂತಾಗಿದೆ. ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಕಾರ್ಯಕ್ರಮಗಳ ಹೊರತಾಗಿ ಬೇರೆ ವಿಚಾರಗಳ ಕುರಿತು ಗಮನ ಹರಿಸುತ್ತಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸುತ್ತಿಲ್ಲ. ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸಲು ಆಗುತ್ತಿಲ್ಲ ಎಂದು ದೂರಿದರು.
ಈಚೆಗೆ ಸುರಿದ ಮಳೆಯಿಂದ ಹಲವೆಡೆ ಮನೆಗಳು ಹಾನಿಯಾಗಿವೆ. ಹಾನಿಗೆ ಸರ್ಕಾರ ಪರಿಹಾರ ನೀಡಿಲ್ಲ .ಗೃಹಲಕ್ಷ್ಮಿ ಯೋಜನೆ ಹಣ ಎರಡು ತಿಂಗಳಿನಿಂದ ಪಾವತಿಯಾಗಿಲ್ಲ. ವೃದ್ಧಾಪ್ಯ ವೇತನ, ವಿಧವಾ ವೇತನ ಮೊದಲಾದವು ಪಾವತಿಯಾಗಿಲ್ಲ. ನೋಂದಣಿ ಸ್ಟಾಂಪ್ ಶುಲ್ಕ ಹೆಚ್ಚಳ ಮಾಡಿದೆ. ಹಾಸ್ಟೆಲ್ಗಳಿಗೆ ಅಡುಗೆಯವರನ್ನು ನೇಮಕ ಮಾಡಿಲ್ಲ ಎಂದು ಆಪಾದಿಸಿದರು.
ಹಾಸ್ಟೆಲ್ ಪ್ರವೇಶಾತಿಗೆ ಸರ್ಕಾರ ಅರ್ಜಿ ಸಲ್ಲಿಕೆ ಆರಂಭಿಸಬೇಕು. ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಮಂಜುನಾಥ ಹಗೇದಾರ ಮಾತನಾಡಿ, ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು. ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಶೀಘ್ರದಲ್ಲಿ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಹಮದ್ ಗೌಸ್ ನದಾಫ್, ಅನಿಲಕುಮಾರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.